ಬೆಂಗಳೂರು : ಅರಮನೆ ಮೈದಾನದಲ್ಲಿ ಗುರುವಾರ(ಫೆ.20) ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ” ಎಂದು ನೌಕರರಿಗೆ ಸಂದೇಶ ನೀಡಿದರು.

ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು “ಡಿಕೆ, ಡಿಕೆ” ಎಂದು ಘೋಷಣೆ ಕೂಗಿದರು. ಆಗ ಸಭಿಕರಿಗೆ ಸುಮ್ಮನಿರಲು ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ ದಯವಿಟ್ಟು ಈ ಪದವನ್ನು ಉಪಯೋಗಿಸಿ. ನಾನು ವಿಧಾನಸೌಧದಲ್ಲಿ ಇರುವವನೇ. ನಾನು ಇನ್ನು 8-10 ವರ್ಷ ಬಿಟ್ಟು ಹೋಗುವುದಿಲ್ಲ. ನನ್ನ ಆರೋಗ್ಯ ಇನ್ನೂ ಗಟ್ಟಿಯಾಗಿದೆ. ನನ್ನ ಮೇಲೆ ನಂಬಿಕೆಯಿಡಿ” ಎಂದು ಡಿಕೆಶಿ ಮಾರ್ಮಿಕವಾಗಿ ಹೊಸ ದಾಳ ಉರುಳಿಸಿದ್ದಾರೆ.
ಓಪಿಎಸ್ ಅನುಷ್ಠಾನಕ್ಕೆ ಅಗತ್ಯ ಕ್ರಮ : “ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿಗೆ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿಕೆಶಿ ಭರವಸೆ ನೀಡಿದ್ದಾರೆ.









