ದುಬೈ : ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಿನ್ನೆ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ ರೋಹಿತ್ ಪಡೆ, 12 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್ಗಳನ್ನು ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗೆಲುವಿನ ದಡ ಮುಟ್ಟಿತು. ಆ ಮೂಲಕ ಕಿವೀಸ್ ವಿರುದ್ಧ 25 ವರ್ಷಗಳ ಹಿಂದಿನ ಫೈನಲ್ ಪಂದ್ಯದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿದೆ. ಹಾಗೆಯೇ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ 3ನೇ ಟ್ರೋಫಿ ಗೆದ್ದ (2002, 2013, 2025) ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.

ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ಪಡೆ ಭರ್ಜರಿ ಆರಂಭ ಪಡೆದಿತ್ತು. ಕಿವೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ (37 ರನ್) ಮತ್ತು ವಿಲ್ ಯಂಗ್ (15 ರನ್) ಜೋಡಿ ಮೊದಲ ವಿಕೆಟ್ ಗೆ 57 ರನ್ ಗಳ ಭರ್ಜರಿ ಜೊತೆಯಾಟವಾಡಿತು. ಆದರೆ ಈ ಹಂತದಲ್ಲಿ ದಾಳಿಗಿಳಿದ ಟೀಂ ಇಂಡಿಯಾದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ವಿಲ್ ಯಂಗ್ರನ್ನು ಔಟ್ ಮಾಡಿ ಭಾರತಕ್ಕೆ ಮೊದಲ ಮುನ್ನಡೆ ತಂದಿತ್ತರು. ಬಳಿಕ 37 ರನ್ ಗಳಿಸಿ ಅಪಾಯಕಾರಿಯಾಗುತ್ತಿದ್ದ ರಚಿನ್ ರವೀಂದ್ರ ಕುಲದೀಪ್ ಯಾದವ್ರ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಬಳಿಕ ಕೇನ್ ವಿಲಿಯಮ್ಸನ್ ಕೂಡ ಕುಲದೀಪ್ ಯಾದವ್ಗೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕ್ರೀಸ್ಗೆ ಬಂದ ಡರಿಲ್ ಮೆಚೆಲ್ ಕಿವೀಸ್ ಬ್ಯಾಟಿಂಗ್ಗೆ ಬಲ ತುಂಬಿದರು. 101 ಎಸೆತಗಳನ್ನು ಎದುರಿಸಿದ ಮಿಚೆಲ್ 3 ಬೌಂಡರಿ ಸಹಿತ 63 ರನ್ ಕಲೆಹಾಕಿದರು. ಅವರಿಗೆ ಟಾಮ್ ಲಾಥಮ್ (14 ರನ್) ಮತ್ತು ಗ್ಲೆನ್ ಫಿಲಿಪ್ಸ್ (34 ರನ್) ಉತ್ತಮ ಸಾಥ್ ನೀಡಿದರು. ಬಳಿಕ ಕ್ರೀಸ್ ಗೆ ಬಂದ ಬ್ರೇಸ್ ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಕಿವೀಸ್ 250ರ ಗಡಿ ದಾಟುವಂತೆ ನೋಡಿಕೊಂಡರು. ಬ್ರೇಸ್ ವೆಲ್ ಕೇವಲ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿ ಸಹಿತ ಅಜೇಯ 53 ರನ್ ಗಳಿಸಿದರು.

ಅಂತಿಮವಾಗಿ ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251ರನ್ ಕಲೆಹಾಕಿ ಭಾರತಕ್ಕೆ ಗೆಲಲ್ಲು 252ರನ್ ಗಳ ಸವಾಲಿನ ಗುರಿ ನೀಡಿತು. ಇನ್ನು ಭಾರತದ ಪರ ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದರೆ, ಶಮಿ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

