ಬೆಂಗಳೂರು : ಕೇಂದ್ರ ಸಚಿವ HD ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇದೀಗ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಮಧ್ಯಸ್ಥಿಕೆದಾರರಾಗಿ ಸುಪ್ರೀಂ ನಿವೃತ್ತ ನ್ಯಾಯಮೂರ್ತಿ ಎ.ಎಸ್ ಓಕಾ ಅವರನ್ನು ನೇಮಿಸಿ ಹೈಕೋರ್ಟ್ ಆದೇಶ ನೀಡಿದೆ.
ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ಆರೋಪದ ಮೇಲೆ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. FIR ರದ್ದುಪಡಿಸುವಂತೆ ಕೋರಿ ಕುಮಾರಸ್ವಾಮಿ ಮತ್ತು ತಂಡ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿತ್ತು.
ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರ ಪೀಠದ ಮುಂದೆ ಈ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ನ್ಯಾ. ಓಕಾ ಅವರನ್ನು ಮಧ್ಯಸ್ಥಿಕೆದಾರರನ್ನಾಗಿ ನೇಮಕ ಮಾಡಲು ನ್ಯಾಯಾಲಯ ನೀಡಿರುವ ಸಲಹೆಗೆ ತಮ್ಮ ಕಕ್ಷಿದಾರರು ಒಪ್ಪಿಗೆ ಸೂಚಿಸಿದ್ದಾರೆ.
ಅದನ್ನು ಪರಿಗಣಿಸಿ ನ್ಯಾಯಪೀಠ, ನ್ಯಾ. ಓಕಾರನ್ನು ಮಧ್ಯಸ್ಥಿಕೆದಾರರನ್ನಾಗಿ ನೇಮಿಸಲಾಗಿದೆ. ಗೌರವಧನ, ವೆಚ್ಚದ ಕುರಿತು ಪಕ್ಷಕಾರರು ನಿರ್ಧರಿಸಿಕೊಳ್ಳಬಹುದು. ಮಧ್ಯಸ್ಥಿಕೆ ಸ್ಥಳ ಮತ್ತು ಇತರೆ ವಿಚಾರಗಳನ್ನು ವಿಸ್ತೃತ ಆದೇಶದಲ್ಲಿ ಉಲ್ಲೇಖಿಸಲಾಗುವುದು ಎಂದು ಆದೇಶ ನೀಡಿದೆ.
ಇದನ್ನೂ ಓದಿ : ಇಸ್ರೇಲ್-ಲೆಬನಾನ್ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ – 10 ದಿನಗಳ ಕದನ ವಿರಾಮ ಘೋಷಣೆ!








