ಕಲಬುರಗಿ : ರಾಜ್ಯದಲ್ಲಿ ನೂತನ ಡಿಸಿಎಂ ಹುದ್ದೆ ಸೃಷ್ಟಿಸುವ ಕುರಿತು ಇನ್ನೂ ಯಾವುದೇ ಅಧಿಕೃತ ಪ್ರಸ್ತಾವ ತಮ್ಮ ಮುಂದೆ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಡಿಸಿಎಂ ಹುದ್ದೆ ಕುರಿತು ಪ್ರಸ್ತಾವ ಬಂದ ಬಳಿಕ ಎಷ್ಟು ಡಿಸಿಎಂಗಳನ್ನು ನೇಮಿಸಬೇಕು, ಎಷ್ಟು ಸಚಿವರನ್ನು ಸಂಪುಟಕ್ಕೆ ಸೇರಿಸಬೇಕು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸಚಿವ ಸಂಪುಟ ವಿಸ್ತರಣೆಯ ಜೊತೆಗೆ ಪ್ರಮುಖ ನಿಗಮ-ಮಂಡಳಿಗಳು ಹಾಗೂ ಪಕ್ಷದ ಪ್ರಮುಖ ಹುದ್ದೆಗಳ ನೇಮಕವನ್ನೂ ಕೈಗೊಳ್ಳಬೇಕೇ ಎಂಬ ವಿಚಾರವೂ ಚರ್ಚೆಯಲ್ಲಿದೆ. ಈ ಎಲ್ಲ ಬೆಳವಣಿಗೆಗಳ ಕುರಿತು ಜೂನ್.3ರ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.
ಮೊದಲ ಹಂತದಲ್ಲಿ ಎಷ್ಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಪ್ರಸ್ತಾವಯೂ ಇನ್ನೂ ಅಂತಿಮಗೊಂಡಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಎಂಟು ಸಚಿವರನ್ನು ಮಾಡುತ್ತಾರೋ, ಹತ್ತು ಸಚಿವರನ್ನು ಮಾಡುತ್ತಾರೋ ಎಂಬ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಮೊದಲ ಹಂತದಲ್ಲಿ ಕೆಲವರನ್ನು ಸಚಿವರನ್ನಾಗಿ ನೇಮಿಸಿ, ಬಳಿಕ 15 ದಿನಗಳು ಅಥವಾ ಒಂದು ತಿಂಗಳ ಅಂತರದಲ್ಲಿ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ನಡೆಸುವ ಕುರಿತು ಚರ್ಚೆ ನಡೆಯುತ್ತಿದೆ. ಆದರೆ ಅಂತಿಮವಾಗಿ ನೂತನ ಮುಖ್ಯಮಂತ್ರಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಖರ್ಗೆ ತಿಳಿಸಿದರು.
ಇದನ್ನೂ ಓದಿ : ನೆಲಮಂಗಲ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಕಾರು – ಚಾಲಕ ಜಸ್ಟ್ ಮಿಸ್!









