ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಇಂದು ರಾಜ್ಯಾದ್ಯಂತ ಮಿಶ್ರ ಹವಾಮಾನ ವಾತಾವರಣ ಕಂಡುಬರಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ.
ಹಗಲಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಶೇಕಡಾ 50 ರಷ್ಟು ಸಾಧ್ಯತೆಯಿದೆ. ಹಗಲಿನಲ್ಲಿ ಗರಿಷ್ಠ ತಾಪಮಾನವು 32°C ವರೆಗೆ ತಲುಪಲಿದ್ದು, ಉಷ್ಣಾಂಶ ಮತ್ತು ಸೆಖೆಯ ವಾತಾವರಣದ ನಡುವೆಯೇ ದಿಢೀರ್ ಮಳೆ ಸುರಿಯುವ ಮುನ್ಸೂಚನೆ ಇದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜನರಿಗೆ ಮತ್ತು ವಾಹನ ಸವಾರರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕಾರವಾರ, ಅಂಕೋಲಾ, ಕುಮಟಾ ಸೇರಿದಂತೆ ಕರಾವಳಿ ಭಾಗ ಹಾಗೂ ಶಿರಸಿ, ಸಿದ್ದಾಪುರ ಸೇರಿದಂತೆ ಘಟ್ಟದ ಮೇಲಿನ ಪ್ರದೇಶಗಳಲ್ಲಿ ದಿನಪೂರ್ತಿ ಮೋಡ ಕವಿದ ವಾತಾವರಣವಿದ್ದು, ಬಿಟ್ಟು ಬಿಟ್ಟು ಮಳೆ ಸುರಿಯಲಿದೆ. ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆಯು ನಿಗಾ ವಹಿಸಿದೆ.
ಇದನ್ನೂ ಓದಿ : ಒಂದು ವಾಹನಕ್ಕೆ 200 ಲೀಟರ್ ಮಾತ್ರ – ಡೀಸೆಲ್ ಮಾರಾಟಕ್ಕೆ ಮಿತಿ ಹೇರಿದ ಕೇಂದ್ರ!









