ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣದ ತನಿಖೆ ತೀವ್ರಗೊಂಡಿದೆ. ಈಗಾಗಲೇ ಎಸ್ಐಟಿ, ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದೆ. ಮತ್ತೊಂದೆಡೆ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದೆ. ಈ ಮಧ್ಯೆ ಸಚಿವ ನಾಗೇಂದ್ರ ಅವ್ರ ಇಬ್ಬರು ಆಪ್ತರಾದ ನೆಕ್ಕುಂಟಿ ನಾಗರಾಜ್, ಸಂಬಂಧಿ ನಾಗೇಶ್ವರ ರಾವ್ನನ್ನು ಎಸ್ಐಟಿ ಅರೆಸ್ಟ್ ಮಾಡಿದೆ. ಇನ್ನು ಈ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.
ಇದರ ಬೆನ್ನಲ್ಲೇ ನಿನ್ನೆ ರಾತ್ರಿ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ರಾಜ್ಯ ಪರಿಶಿಷ್ಟ ಪಂಗಡ ಅಭಿವೃದ್ಧಿ ಇಲಾಖೆ ಸಚಿವ ಬಿ. ನಾಗೇಂದ್ರ ಅವರು ರಾಜಭವನಕ್ಕೆ ತೆರಳಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟಕ್ಕಿಳಿಯುವ ಎಲ್ಲಾ ಸಾಧ್ಯತೆಗಳಿವೆ. ಅಲ್ಲದೇ ಈ ಪ್ರಕರಣದಲ್ಲಿ ಸ್ವತಃ ಸಿಬಿಐ ಪ್ರವೇಶ ಮಾಡಿ ತನಿಖೆ ಕೈಗೆತ್ತಿಕೊಂಡಿದ್ದು, ಹಲವರಲ್ಲಿ ತಳಮಳ ಶುರುವಾಗಿದೆ. ಹೀಗಾಗಿ ಸರ್ಕಾರಕ್ಕೆ ಮುಜುಗರವಾಗಬಾರದು ಎನ್ನುವ ಮುಂಜಾಗ್ರತಾವಾಗಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ರಾತ್ರಿ ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದಾರೆ.
ನಿನ್ನೆ ರಾತ್ರಿ ನಾಗೇಂದ್ರ ಅವರನ್ನು ಸಿಎಂ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಮಹತ್ವದ ಚರ್ಚೆ ಮಾಡಿದ್ದು, ಸಿಬಿಐಗೆ ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ರಾಜೀನಾಮೆ ಪಡೆಯುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ನಾಗೇಂದ್ರ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಇನ್ನು ನಾಗೇಂದ್ರ ಜೊತೆಗಿನ ಮಾತುಕತೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಸಹ ಉಪಸ್ಥಿತರಿದ್ದರು.
ಇದನ್ನೂ ಓದಿ : SSLC ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಟಾಪರ್ – ಬೆಂಗಳೂರಿನ ಭಾವನಾ ರಾಜ್ಯಕ್ಕೆ ಪ್ರಥಮ..!