ಯಾವುದೇ ಪಶ್ಚಾತ್ತಾಪವಿಲ್ಲ, ಕ್ಷಮೆ ಕೇಳಲ್ಲ, ಶೂ ಎಸೆಯಲು ದೇವರೇ ಪ್ರಚೋದಿಸಿದ್ದಾನೆ – ವಕೀಲ ರಾಕೇಶ್‌ ಕಿಶೋರ್‌!

ಸುಪ್ರೀಂ ಕೋರ್ಟ್‌ನ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್‌ ಕಿಶೋರ್‌ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಸರಿಯಾದುದ್ದನ್ನೇ ಮಾಡಿದ್ದೇನೆ, ಘಟನೆ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ, ದೇವರೆ ನನ್ನನ್ನು ಪ್ರಚೋದಿಸಿದ್ದು ಎಂದಿದ್ದಾರೆ.

ಈ ಬಗ್ಗೆ ವಕೀಲ ರಾಕೇಶ್‌ ಕಿಶೋರ್‌ ಮಾತನಾಡಿ, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ. ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ. ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ನಂತರ ಮಾರಿಷಸ್‌ನಲ್ಲಿ ಭಾರತೀಯ ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು ಎಂದು ಹೇಳಿದರು.

ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಕೀಟಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದೇನೆ ಎಂದು ಹೇಳಿಕೊಂಡಿರುವ ಕಿಶೋರ್, ವಕೀಲ ವೃತ್ತಿ ಮಾಡುವ ಮೊದಲು ವಿಶ್ವ ಆರೋಗ್ಯ ಸಂಸ್ಥೆಗೆ ಸಲಹೆ ನೀಡಿದ್ದೇನೆ. ಮಾನಸಿಕವಾಗಿಯೂ ನಾನು ಸ್ಥಿಮಿತದಲ್ಲಿದ್ದೇನೆ ಎಂದಿದ್ದಾರೆ.

ನನ್ನ ಕೃತ್ಯದಿಂದ ಕುಟುಂಬದವರು ಅಸಮಾಧಾನಗೊಂಡಿದ್ದಾರೆ ಎನ್ನುವುದು ನನಗೆ ತಿಳಿದಿದೆ.  ಮುಂದೆ ಯಾವುದೇ ರೀತಿಯ ಪರಿಣಾಮ ಎದುರಿಸಲು ನಾನು ಸಿದ್ಧನಿದ್ದೇನೆ. ದೇವರ ಹೆಸರಿನಲ್ಲೇ ಎಲ್ಲವನ್ನೂ ಸಹಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : CJI ಬಿ.ಆರ್ ಗವಾಯಿಗೆ ಶೂ ಎಸೆಯಲು ಯತ್ನಿಸಿದ ಕೇಸ್ – ವಕೀಲನ ವಿರುದ್ಧ ಕ್ರಮಕ್ಕೆ ಸುಪ್ರೀಂ ನಕಾರ.. ರಾಕೇಶ್ ಕಿಶೋರ್ ರಿಲೀಸ್!

Btv Kannada
Author: Btv Kannada

Read More