ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆಯೇ ಎಂಬ ಕುರಿತ ಸತ್ಯಾಂಶಗಳನ್ನು ಪ್ರಮಾಣಪತ್ರದ ಮೂಲಕ ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೊರ್ಟ್ ಸೂಚನೆ ನೀಡಿದೆ.
ಕಾನೂನಿನಲ್ಲಿ ಅವಕಾಶ ವಿಲ್ಲದಿದ್ದರೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಿರುವ ಕ್ರಮ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯ ಮತ್ತು ನ್ಯಾ ಟಿ.ಜೆ.ಶಿವಶಂಕರೇಗೌಡ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಮಂಗಳವಾರ (ಮಾರ್ಚ್ 5)ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿವಾರು ಸಮೀಕ್ಷೆ ನಡೆಸುವುದಕ್ಕೆ ಅಧಿಕಾರವೇ ಇಲ್ಲ. ಆದರೂ, ಸರ್ಕಾರ ಸಮೀಕ್ಷೆ ನಡೆಸಿದೆ. ಜೊತೆಗೆ, ಆ ವರದಿಯನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವರದಿ ಜಾತಿ ಆಧಾರದಲ್ಲಿಯೇ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಇಲ್ಲವೇ ಎಂದು ಪ್ರಶ್ನೆ ಮಾಡಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಜಾತಿ ಆಧಾರದಲ್ಲಿ ಶೈಕ್ಷಣಿಕ, ಸಾಮಾಜಿಕ ವರದಿ ಸಿದ್ಧ ಪಡಿಸಲಾಗಿದೆ, ಈಗಾಗಲೇ ಸರ್ಕಾರ ಸ್ವೀಕರಿಸಿದೆ ಎಂದು ತಿಳಿಸಿದರು.
ವರದಿ ಸ್ವೀಕರಿಸಿರುವ ಸಂಬಂಧ ಮಾಹಿತಿ ಇಲ್ಲ. ಈ ಬಗ್ಗೆ ಯಾವುದೇ ಸರ್ಕಾರದ ನಿರ್ದೇಶನ ಇಲ್ಲ ಎಂದು ಈ ವೇಳೆ ಸರ್ಕಾರಿ ವಕೀಲರು ಹೇಳಿದರು. ಇದನ್ನು ಆಲಿಸಿದ ನ್ಯಾಯಪೀಠ, ವರದಿ ಸ್ವೀಕರಿಸಲಾಗಿದೆಯೇ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚನೆ ನೀಡಿ, ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ಇದನ್ನೂ ಓದಿ : ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಕ್ಯೂ ಆರ್ ಕೋಡ್ ಸಹಿತ ಮನೆಗೆ ನೋಟಿಸ್..!