ಬೆಂಗಳೂರು : ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಗರದ ಮುಖ್ಯ ಮೆಟ್ರೋಪಾಲಿಟಿನ್ ಕೋರ್ಟ್ ಆದೇಶ ನೀಡಿದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಗಳು, ಎಂ.ಲಕ್ಷ್ಮಣ್ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ. ಅಲ್ಲದೆ, ಎಂ.ಲಕ್ಷ್ಮಣ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ ನೀಡಿದೆ. ಜೂನ್ 12 ರಂದು ಖುದ್ದು ಹಾಜರಾಗುವಂತೆ ಎಂ.ಲಕ್ಷ್ಮಣ್ ಅವರಿಗೆ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ.
ಲಕ್ಷ್ಮಣ್ ವಿರುದ್ಧ ಪ್ರತಾಪ್ ಸಿಂಹ ಮಾಡಿದ ಆರೋಪವೇನು? 2014 ರಿಂದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಅವರು ನನ್ನ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಮೈಸೂರು-ಬೆಂಗಳೂರು ಹೈವೇ ದಶಪಥ ರಸ್ತೆಯ ನಿರ್ಮಾಣದ ಸಮಯದಲ್ಲಿ ನಾನು 60 ಕೋಟಿ ರೂಪಾಯಿ ಹಣವನ್ನು ಅಕ್ರಮವಾಗಿ ಸಂಪಾದನೆ ಮಾಡಿ ಕೊಡಗಿನ ಬೇನಾಮಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ಆಪಾದಿಸಿ ಐಟಿ, ಇಡಿ ಸಂಸ್ಥೆಗೆ ದೂರು ನೀಡಿದ್ದಾಗಿ ಹೇಳಿದ್ದಾರೆ. ಈ ಬಗ್ಗೆ ಪತ್ರಿಕೆಯೊಂದರಲ್ಲಿ ವರದಿ ನೀಡಿದ್ದಾರೆ.
ಇದು ನನ್ನ ವಿರುದ್ಧ ಸಮಾಜದಲ್ಲಿ ಅಪಪ್ರಚಾರ ಮಾಡುವ ಸಲುವಾಗಿ ಲಕ್ಷ್ಮಣ್ ಅವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ನನಗೆ ನಿಂದನೆ ಮಾಡಿ ಮಾನಹಾನಿ ಮಾಡಿರುತ್ತಾರೆ. ಸದರಿ ವಿಚಾರವು ನನಗೆ ಸಾರ್ವಜನಿಕವಾಗಿ ಹಾಗೂ ವೈಯಕ್ತಿಕವಾಗಿ ಮಾನಹಾನಿಯಾಗಿರುತ್ತದೆ ಎಂದು ಪ್ರತಾಪ್ ಸಿಂಹ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಇದನ್ನೂ ಓದಿ : ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ – ಬಾಂಬ್ ಬ್ಲಾಸ್ಟ್ ಅನುಮಾನ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ..!