ಬೆಂಗಳೂರು : ಮುಂಬರುವ IPL ಕ್ರಿಕೆಟ್ ಪಂದ್ಯಾವಳಿಗಳಿಗೆ ಅನುಕೂಲವಾಗುವಂತೆ ಸಂಸ್ಕರಿಸಿದ ನೀರನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಒದಗಿಸಲು ಕೋರಿ KSCA ಆಡಳಿತ ಮಂಡಳಿಯ ಪದಾಧಿಕಾರಿಗಳು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಅವರು ಸಂಸ್ಕರಿಸಿದ ನೀರನ್ನು ಬಳಸಲು ಉತ್ತೇಜನ ನೀಡುವ ದೃಷ್ಟಿಯಿಂದ ಹಾಗೂ ಇದರಿಂದ ಕಾವೇರಿ ಅಥವಾ ಕೊಳವೆ ಬಾವಿಯ ನೀರು ದುರ್ಬಳಕೆ ಆಗದೆ ಇರುವುದರಿಂದ ಸದರಿ ಚಟುವಟಿಕೆಯನ್ನು ಅನುವು ಮಾಡವುದು ಎಂದು ತಿಳಿಸಿದ್ದಾರೆ.
ಈ ಬಾರಿ ಬೇಸಿಗೆಯ ಬಿಸಿ ಐಪಿಎಲ್ ಟೂರ್ನಿಗೂ ತಟ್ಟಿದ್ದು, ಪಂದ್ಯದ ವೇಳೆ ಮೈದಾನ ಹದಗೊಳಿಸಲು ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳಲು KSCA ಮುಂದಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಗಳಿಗೆ ಸಂಸ್ಕರಿಸಿದ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಭರವಸೆ ನೀಡಿದ್ದಾರೆ.
ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ಗಳಷ್ಟು ನೀರಿನ ಅವಶ್ಯಕತೆ ಇದೆ. ಕೆಎಸ್ಸಿಎ ಅಧಿಕಾರಿಗಳು ಸಂಸ್ಕರಿಸಿದ ನೀರನ್ನು ಕೇಳಿದ್ದಾರೆ. ಸಂಸ್ಕರಿಸಿದ ನೀರಿನ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಾವು ಅವರ ಮನವಿಯನ್ನು ಒಪ್ಪಿಕೊಂಡಿದ್ದೇವೆ. ಕಬ್ಬನ್ ಪಾರ್ಕ್ನಲ್ಲಿರುವ ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಐಪಿಎಲ್ ಪಂದ್ಯಾವಳಿಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಮನೋಹರ್ ತಿಳಿಸಿದ್ದಾರೆ. ಸುಮಾರು 32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ಚಿನ್ನಸ್ವಾಮಿ ಕ್ರೀಡಾಂಗಣವು ಮಾರ್ಚ್ 25 ರಂದು ನಗರದಲ್ಲಿ ಮೊದಲ ಐಪಿಎಲ್ ಪಂದ್ಯವನ್ನು ಆಯೋಜಿಸಲು ಸಿದ್ಧವಾಗಿದೆ.
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಆವೃತ್ತಿ ಟೂರ್ನಿ ಮಾರ್ಚ್ 22ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಚೆನ್ನೈನ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳು ಕಾದಾಟ ನಡೆಸಲಿದ್ದು, ಹಣಾಹಣಿ ವೀಕ್ಷಿಸಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಬೆಂಗಳೂರಿನಲ್ಲಿ ಯಾವಾಗ ಪಂದ್ಯಗಳು?
ಮಾರ್ಚ್ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ನಂತರ ಮಾರ್ಚ್ 29 ರಂದು ಕೆಕೆಆರ್ ವಿರುದ್ಧ, ಏಪ್ರಿಲ್ 2 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ಸಿಬಿ ತವರು ಕ್ರೀಡಾಂಗಣದಲ್ಲಿ ಸೆಣಸಲಿದೆ.
ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!