ಸಾವಿನಲ್ಲೂ ಸಾರ್ಥಕತೆ ಮೆರೆದ ನಟಿ ಸರೋಜಾದೇವಿ – ನೇತ್ರದಾನ ಮಾಡಿ ಅಂಧರ ಬಾಳಿಗೆ ಬೆಳಕಾದ ‘ಅಭಿನಯ ಸರಸ್ವತಿ’!

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರಿಂದು ವಿಧಿವಶರಾಗಿದ್ದು, ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಭಿನಯ ಸರಸ್ವತಿ ನೇತ್ರದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ.

ನೇತ್ರದಾನ ಮಾಡುವಂತೆ ವರನಟ ಡಾ.ರಾಜ್‌ಕುಮಾರ್ ಕೂಡ ಕರೆ ಕೊಟ್ಟಿದ್ದರು. ತಮ್ಮ ಕಣ್ಣುಗಳನ್ನು ಡಾ.ರಾಜ್‌ಕುಮಾರ್ ದಾನ ಮಾಡಿದ್ದರು. ಡಾ.ರಾಜ್‌ಕುಮಾರ್ ಹಾದಿಯನ್ನು ಅನುಸರಿಸಿ ಅನೇಕರು ನೇತ್ರದಾನ ಮಾಡಿದ್ದಾರೆ. ಇದೀಗ ಹಿರಿಯ ನಟಿ ಸರೋಜಾದೇವಿ ಅವರ ಕಣ್ಣುಗಳನ್ನೂ ದಾನ ಮಾಡಲಾಗಿದೆ.

ಕನ್ನಡ ಸೇರಿದಂತೆ ಬೇರೆ ಭಾಷೆಯ ಸಿನಿಮಾಗಳಲ್ಲಿಯೂ ನಾಯಕಿಯಾಗಿ ಮೆರೆದಿದ್ದ ಸರೋಜಾದೇವಿ ಅವರು ವಯೋಸಹಜ ಕಾಯಿಲೆಯಿಂದ 87 ವರ್ಷಕ್ಕೆ ವಿಧಿವಶರಾಗಿದ್ದಾರೆ. ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 1938ರ ಜನವರಿ 7 ರಂದು ಬೆಂಗಳೂರಿನಲ್ಲಿ ಜನಿಸಿದ ಬಿ ಸರೋಜಾದೇವಿ ಅಂದಿನ ಕಾಲದಲ್ಲೇ ಮೊದಲ ಲೇಡಿ ಸೂಪರ್‌ಸ್ಟಾರ್ ಆಗಿದ್ದವರು. 1962ರಲ್ಲಿ ಪ್ರಸಾರವಾದ ‘ಕಿತ್ತೂರ ರಾಣಿ ಚೆನ್ನಮ್ಮ’ ಸಿನಿಮಾದಲ್ಲಿ ಬಿ ಸರೋಜಾದೇವಿ ಅವರು ನಟಿಸಿದ್ದರು.

ಈಗಾಗಲೇ ನಟಿಯ ಕಣ್ಣುಗಳನ್ನ ನಾರಾಯಣ ನೇತ್ರಾಲಾಯದ ವೈದ್ಯರು ತೆಗೆದುಕೊಂಡು ಹೋಗಿದ್ದಾರೆ. ನಾಳೆ ನಟಿ ಸರೋಜಾದೇವಿ ಅವರ ಅಂತ್ಯ ಸಂಸ್ಕಾರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಣ್ವ ಡ್ಯಾಮಿನ ಪಕ್ಕದಲ್ಲೇ ಇರೋ ದಶಾವರದಲ್ಲಿ ಕುಟುಂಬಸ್ಥರು ಮಾಡಲಿದ್ದಾರೆ. ಒಕ್ಕಲಿಗ ಸಂಪ್ರದಾಯದಂತೆ ವಿಧಿ ವಿಧಾನಗಳು ನೆರವೇರಲಿವೆ.

ಇದನ್ನೂ ಓದಿ : ಕರುನಾಡ ಚಕ್ರವರ್ತಿ ಶಿವಣ್ಣ ಬರ್ತ್​ಡೇಗೆ “45” ಚಿತ್ರದ ವಿಶೇಷ ಪೋಸ್ಟರ್ ರಿಲೀಸ್!

Btv Kannada
Author: Btv Kannada

Read More