ನಿರ್ಮಾಣ ಕಟ್ಟಡಗಳಿಗೆ OC ವಿನಾಯಿತಿ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ – ಆ.20ರಂದು ರಾಜ್ಯ ವಿದ್ಯುತ್ ಗುತ್ತಿಗೆದಾರರ ಸಂಘ ಪ್ರೊಟೆಸ್ಟ್!

ಬೆಂಗಳೂರು : ನಗರದ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಕಟ್ಟಡಗಳಿಗೆ ಕಡ್ಡಾಯಗೊಳಿಸಿರುವ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 20ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾದರರ ಸಂಘ ತಿಳಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ. ರಮೇಶ್, ಸುಪ್ರೀಂ ಕೋರ್ಟ್‌ ಆದೇಶದಂತೆ ಕಳೆದ ಏಪ್ರಿಲ್‌ನಿಂದ ಇದುವರೆಗೂ ಎಂಟು ಲಕ್ಷ ಮನೆ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್ಕಾಂಗಳಲ್ಲಿ ಕರೆದಿರುವ ಬೃಹತ್ ಟೆಂಡರ್‌ಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಈ ಬಗ್ಗೆ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಪ್ರಥಮ ದರ್ಜೆ ಗುತ್ತಿಗೆದಾರರ ಪರವಾನಗಿ ಪಡೆಯಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಕಡ್ಡಾಯ ಮಾಡಲಾಗಿದೆ. ಇದರಿಂದ ವಿನಾಯಿತಿ ನೀಡಬೇಕು. ಅನುಭವದ ಆಧಾರದ ಮೇಲೆ ಪ್ರಥಮ ದರ್ಜೆ ಗುತ್ತಿಗೆದಾರರ ಪರವಾನಗಿ ನೀಡಬೇಕು ಎಂದರು.

66/11 ಕೆವಿ ಹಾಗೂ 110/11 ವಿದ್ಯುತ್ ವಿತರಣಾ ಕೇಂದ್ರಗಳ ಪಾಳಿ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸಲು ಪ್ರಥಮ ದರ್ಜೆ ಗುತ್ತಿಗೆದಾರರಿಗೆ ಅನುಮತಿ ನೀಡಬೇಕು. ಎಸ್ಕಾಂಗಳಲ್ಲಿ ವಿದ್ಯುತ್ ಗುತ್ತಿಗೆದಾರರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ವಿದ್ಯುತ್‌ ಅವಘಡಗಳಲ್ಲಿ ಅಪಘಾತ ಅಥವಾ ಮರಣ ಹೊಂದಿದರೆ ಪರಿಹಾರ ನೀಡಬೇಕು ಎಂದು ಸಿ. ರಮೇಶ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ದೆಹಲಿಯಲ್ಲಿ ಮೂವರು ಪಿತೂರಿ ಮಾಡಿ ಸಚಿವ ಸ್ಥಾನ ತೆಗೆಸಿದ್ದಾರೆ – ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ!

Btv Kannada
Author: Btv Kannada

Read More