ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಮತ್ತು ಸಹ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಜೈಲು ಅಧಿಕಾರಿಗಳು ಮುಂದಾಗಿದ್ದಾರೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿದ್ದು, ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
ಯಾರನ್ನು ಎಲ್ಲಿಗೆ ಶಿಫ್ಟ್ ಮಾಡಲಾಗುತ್ತದೆ? ಆರೋಪಿಗಳನ್ನು ಬೇರೆ ಜೈಲಿಗೆ ಶಿಪ್ಟ್ ಮಾಡಲು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲು, ಜಗದೀಶ್, ಲಕ್ಷ್ಮಣ್ ಶಿವಮೊಗ್ಗ ಜೈಲು, ನಾಗರಾಜ್ ಗುಲ್ಬರ್ಗ ಜೈಲು ಮತ್ತು ಪ್ರದೂಷ್ನನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಬೇಕು, ಹಾಗೆಯೇ ಪ್ರಕರಣದ A1 ಆರೋಪಿ ಪವಿತ್ರಾ ಗೌಡ, ಅನುಕುಮಾರ್ ಅವರನ್ನು ಪರಪ್ಪನ ಅಗ್ರಹಾರದಲ್ಲೇ ಇರಿಸಬೇಕು ಎಂದು ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಸ್ಥಳಾಂತರಕ್ಕೆ ಕಾರಣಗಳೇನು? ಆರೋಪಿಗಳ ರಾಜಾತಿಥ್ಯ ಮತ್ತು ಜೈಲು ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಬಾರಿಯ ರಾಜಾತಿಥ್ಯ ಪ್ರಕರಣವನ್ನು ಉಲ್ಲೇಖಿಸಿ, ಭದ್ರತಾ ಹಿತದೃಷ್ಟಿಯಿಂದ ಆರೋಪಿಗಳ ಸ್ಥಳಾಂತರ ಅತ್ಯಗತ್ಯ ಎಂದು ಮನವಿ ಮಾಡಲಾಗಿದೆ. ದರ್ಶನ್ ಅವರ ಜಾಮೀನು ರದ್ದು ಆದೇಶದ ಸಮಯದಲ್ಲಿ ಸುಪ್ರೀಂ ಕೋರ್ಟ್ ಜೈಲು ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಕಟುವಾಗಿ ಟೀಕಿಸಿತ್ತು. ನ್ಯಾಯಾಲಯದ ಈ ಖಂಡನೆಯಿಂದಾಗಿ, ಜೈಲು ಅಧಿಕಾರಿಗಳು ಯಾವುದೇ ಹೆಚ್ಚಿನ ವಿವಾದಗಳಿಗೆ ಅವಕಾಶ ನೀಡದಂತೆ ಆರೋಪಿಗಳನ್ನು ಬೇರೆಡೆಗೆ ವರ್ಗಾಯಿಸಲು ನಿರ್ಧರಿಸಿದ್ದಾರೆ.
ಈ ಸ್ಥಳಾಂತರದ ನಿರ್ಧಾರವು ಪ್ರಭಾವಿ ವ್ಯಕ್ತಿಗಳು ಬಂಧಿತರಾದಾಗ ಜೈಲುಗಳಲ್ಲಿ ಎದುರಾಗುವ ಭದ್ರತಾ ಸವಾಲುಗಳನ್ನು ಎದುರಿಸುವಲ್ಲಿ ಹೊಸ ದಿಕ್ಕನ್ನು ಸೂಚಿಸುತ್ತದೆ. ನ್ಯಾಯಾಲಯದ ಅಂತಿಮ ತೀರ್ಪು ಬಂದ ನಂತರವೇ ಈ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ : ಧರ್ಮಸ್ಥಳದ ವಿರುದ್ದ ಮಾತನಾಡಿದವರ ಮೇಲೆ ಸುಮೊಟೊ ಕೇಸ್ ಹಾಕಿ – ಶಾಸಕ ಅಶ್ವತ್ಥ್ ನಾರಾಯಣ್ ಆಗ್ರಹ!







