ಕೋಲ್ಕತ್ತ : ಭಾರತದ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದೆ. ಬುರ್ದ್ವಾನ್ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೌರವ್ ಗಂಗೂಲಿ ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್ಪ್ರೆಸ್ವೇನಲ್ಲಿ ಹಾದು ಹೋಗುವಾಗ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿ ಅವರ ಕಾರಿನ ಚಾಲಕ ತಕ್ಷಣ ಬ್ರೇಕ್ ಹಾಕಿದ್ದು, ಹಿಂದೆಯಿದ್ದ ಬೆಂಗಾವಲು ಪಡೆಯ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಹೀಗಾಗಿ ಸೌರವ್ ಗಂಗೂಲಿ ಈ ಭೀಕರ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.
ಅಪಘಾತ ಹಿನ್ನೆಲೆಯಲ್ಲಿ ಗಂಗೂಲಿ ಘಟನಾ ಸ್ಥಳದಲ್ಲಿ ಸುಮಾರು 10 ನಿಮಿಷಗಳ ಕಾಲವಿದ್ದರು. ನಂತರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.
