ರೌಡಿಶೀಟರ್ ಬಿಕ್ಲಾ ಶಿವ ಕೊಲೆ ಪ್ರಕರಣ – ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗ್ಗ ಅರೆಸ್ಟ್!

ಬೆಂಗಳೂರು : ರೌಡಿಶೀಟರ್ ಬಿಕ್ಲಾ ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎ1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್ ಜಾರಿ ಹಿನ್ನೆಲೆ ದೆಹಲಿ ಏರ್‌ಪೋರ್ಟ್‌ನಲ್ಲಿ ಜಗ್ಗ ಲಾಕ್ ಆಗಿದ್ದಾನೆ. ಜಗ್ಗನನ್ನು ವಶಕ್ಕೆ ಪಡೆದು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸದ್ಯ ಜಗ್ಗನನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು ಆತನನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದರು. ಬಳಿಕ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗ ಸೇರಿ ಈವರೆಗೆ 21 ಆರೋಪಿಗಳನ್ನು ಬಂಧಿಸಲಾಗಿದೆ.

ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಗದೀಶ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಕೆಲವು ವರ್ಷಗಳ ಹಿಂದೆ ಆತನನ್ನು ರೌಡಿಪಟ್ಟಿಯಿಂದ ಕೈ ಬಿಡಲಾಗಿತ್ತು. ಬಿಕ್ಲಾ ಶಿವ ಕೊಲೆ ಪ್ರಕರಣದಲ್ಲಿ ಜಗದೀಶ್ ಪ್ರಮುಖ ಆರೋಪಿಯಾಗಿದ್ದಾನೆ.

 ಪ್ರಕರಣದ ಹಿನ್ನೆಲೆ : ಜುಲೈ 15ರಂದು ಬಿಕ್ಲಾ ಶಿವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಶಿವ ಅವರ ತಾಯಿ ವಿಜಯಲಕ್ಷ್ಮಿ ಅವರು ನೀಡಿದ ದೂರು ಆಧರಿಸಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬೈರತಿ ಬಸವರಾಜ್ ಅವರನ್ನು ಭಾರತಿನಗರ ಠಾಣೆಯ ಪೊಲೀಸರು ಎರಡು ಬಾರಿ ವಿಚಾರಣೆ ನಡೆಸಿದ್ದರು. 15 ಆರೋಪಿಗಳನ್ನು ಬಂಧಿಸಿದ್ದರು. ಅದಾದ ಮೇಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿತ್ತು.

ಇದನ್ನೂ ಓದಿ : ಸಸ್ಪೆನ್ಸ್-ಥ್ರಿಲ್ಲರ್ ‘ಮಾಯಾವಿ’ ಚಿತ್ರದ ಟ್ರೇಲರ್, ಸಾಂಗ್ಸ್​​ ರಿಲೀಸ್!

Btv Kannada
Author: Btv Kannada

Read More