ಮಾಜಿ ಸಚಿವ ಮುರುಗೇಶ್ ನಿರಾಣಿಯವರ ಪುತ್ರ ಹಾಗೂ ಉದ್ಯಮಿ ವಿಜಯ್ ನಿರಾಣಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ತ್ಯಾಜ್ಯ ಘಟಕವೊಂದರಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದ ಹಳೆಯ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆ ನಡೆಸದಂತೆ ಕರ್ನಾಟಕ ಹೈಕೋರ್ಟ್ ಎರಡು ವರ್ಷಗಳ ಹಿಂದೆ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ವಾದ – ವಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಸಂದೀಪ್ ಮೆಹ್ತಾ ಅವರುಳ್ಳ ನ್ಯಾಯಪೀಠ, ವಿಜಯ್ ನಿರಾಣಿ ಹಾಗೂ ಈ ಪ್ರಕರಣದಲ್ಲಿ ಆರೋಪ ಹೊತ್ತಿರುವ ಇತರರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲು ತೀರ್ಪು ನೀಡಿದೆ.
ಏನಿದು ಪ್ರಕರಣ? ನಿರಾಣಿ ಶುಗರ್ಸ್ ಲಿಮಿಟೆಡ್ ಕಂಪನಿಯ ನಿರ್ದೇಶಕರಾಗಿರುವ ವಿಜಯ್ ನಿರಾಣಿ, ಮುಧೋಳದ ಕುಳಲಿ ಗ್ರಾಮದಲ್ಲಿರುವ ನಿರಾಣಿ ಶುಗರ್ಸ್ನ ಡಿಸ್ಟಿಲರಿ ಫ್ಯಾಕ್ಟರಿಯಲ್ಲಿ ತ್ಯಾಜ್ಯ ನಿರ್ವಹಣಾ ಘಟಕವೊಂದನ್ನು (ಇಟಿಪಿ) ಸ್ಥಾಪಿಸಿದ್ದರು. ಆ ಘಟಕಕ್ಕೆ ಅನುಮತಿ ಪಡೆದಿರಲಿಲ್ಲ. ಆ ಘಟಕದಲ್ಲಿ 2018ರ ಡಿ. 16ರಂದು ಬಾಯ್ಲರ್ ಸ್ಫೋಟಗೊಂಡಿತ್ತು. ಆ ದುರ್ಘಟನೆಯಲ್ಲಿ ಆರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಇಬ್ಬರು ಗಾಯಗೊಂಡಿದ್ದರು.
ಪ್ರಾಥಮಿಕ ತನಿಖೆ ನಡೆಸಿದ್ದ ಪೊಲೀಸರು ವಿಜಯ್ ನಿರಾಣಿಯವರ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಿದ್ದರು. ಅವರನ್ನು ಹಾಗೂ ಅವರ ಕಾರ್ಖಾನೆಯ ಟೆಕ್ನಿಕಲ್ ನಿರ್ದೇಶಕರಾದ ಎಂ.ಎಸ್.ಹಟ್ಟಿಕಲ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ಆನಂತರ ಆ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. 2023ರ ಜು. 26ರಂದು ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್, ವಿಜಯ್ ನಿರಾಣಿಯವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವುದಕ್ಕೆ ಬ್ರೇಕ್ ಹಾಕಿತ್ತು. ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ಇದನ್ನೂ ಓದಿ : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ- ಉಪಾಧ್ಯಕ್ಷರ ನೇಮಕ – ಇಲ್ಲಿದೆ ಪದನಿಮಿತ್ತ ಸದಸ್ಯರ ಲಿಸ್ಟ್!







