ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು. ಸ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಶಾಸಕ ಯತ್ನಾಳ್ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಏನಿದೆ?
ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್ಗೆ ವಿಶೇಷ ಅನುಮತಿ ನೀಡಬಾರದು. ಇತರ ಸಂಸ್ಥೆಗಳ ಕಾರ್ಯಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಾರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚಿಸಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ? ಇದು 7 ಕೋಟಿ ಜನರ ಸಮೀಕ್ಷೆ – ಸಿಎಂ ಸಿದ್ದರಾಮಯ್ಯ ಟಾಂಗ್!







