ಬೆಂಗಳೂರು : ‘ನವೆಂಬರ್ ಕ್ರಾಂತಿ’ ಹೇಳಿಕೆ ನೀಡಿ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಇಂದು ಡಿನ್ನರ್ ಪಾರ್ಟಿ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜಣ್ಣ ಅವರ ಆಹ್ವಾನದ ಮೇರೆಗೆ ಈ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಳ್ಳಲಿದ್ದು, ಈ ಬೆಳವಣಿಗೆ ಕಾಂಗ್ರೆಸ್ನಲ್ಲಿ ಮಾತ್ರವಲ್ಲದೆ, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2 ಗಂಟೆ ಬಳಿಕ ತುಮಕೂರಿಗೆ ಹೊರಡಲಿದ್ದಾರೆ. ಬೆಂಗಳೂರಿನ HAL ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಅವರು ತುಮಕೂರಿಗೆ ಆಗಮಿಸಲಿದ್ದಾರೆ. ತುಮಕೂರು ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ಇಂದು ಮಧ್ಯಾಹ್ನ 2:30 ರಿಂದ 3:30ರವರೆಗೂ ರಾಜಣ್ಣ ಅವರು ಆಯೋಜಿಸಿರುವ ಡಿನ್ನರ್ ಪಾರ್ಟಿಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಮಾಜಿ ಸಚಿವ ಹಾಗೂ ಸಿಎಂ ಆಪ್ತ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಈ ಔತಣಕೂಟ ನಡೆಯಲಿದೆ. ಸಿದ್ದರಾಮಯ್ಯ ಬಣಕ್ಕೆ ಸೇರಿದ ಕೆಲ ಪ್ರಭಾವಿ ಸಚಿವರು ಮತ್ತು ಪ್ರಮುಖ ನಾಯಕರು ಕೂಡ ಈ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ICUನಲ್ಲಿದೆ – ಆರ್.ಅಶೋಕ್ ವಾಗ್ದಾಳಿ!







