“ಉಡಾಳ” ಚಿತ್ರದ ಟ್ರೇಲರ್ ಬಿಡುಗಡೆ : ನಿಶ್ವಿಕಾ ನಾಯ್ಡು-ನವೀನ್ ಶಂಕರ್ ಸಾಥ್!

ಅಮೋಲ್ ಪಾಟೀಲ್ ನಿರ್ದೇಶನದ ಹಾಗೂ ಪದವಿಪೂರ್ವ ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ “ಉಡಾಳ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ ಹೆಸರಾಂತ ಕಲಾವಿದರಾದ ನವೀನ್ ಶಂಕರ್ ಹಾಗೂ ನಿಶ್ವಿಕಾ ನಾಯ್ಡು ಶುಭ ಕೋರಿದರು. ಮಾಜಿ ಸಚಿವರಾದ ಆಂಜನೇಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ನಿರ್ಮಾಪಕ ಯೋಗರಾಜ್ ಭಟ್ ಅವರು, ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು ಸುಲಭವಲ್ಲ. ಆದರೆ ನಿರ್ದೇಶಕ ಅಮೋಲ್ ಪಾಟೀಲ್, ನಾಯಕ ಪೃಥ್ವಿ ಶಾಮನೂರು ಸೇರಿದಂತೆ 20 ಜನ ಕಲಾವಿದರ ತಂಡವನ್ನಿಟ್ಟುಕೊಂಡು “ಉಡಾಳ” ಚಿತ್ರದ ಮೂಲಕ ನಗುವಿನ ರಸದೌತಣವನ್ನೇ ಬಡಿಸಿದ್ದಾನೆ. ವೃತ್ತಿಯಲ್ಲಿಉಧ್ಯಾಪಕರಾಗಿದ್ದ ರವಿ ಶಾಮನೂರು ಸಿನಿಮಾಗೆ ಬಂಡಾವಾಳ ಹೂಡಿದ್ದಾರೆ. ಇದೇ ರೀತಿ ಕಲಿತು ನಟನೆ ಮಾಡಿದರೆ, ಪೃಥ್ವಿ ಸ್ವಲ್ಪ ದಿನಗಳಲ್ಲಿ ಸ್ಟಾರ್ ನಟ ಆಗುತ್ತಾನೆ. ನವೆಂಬರ್ 14 ಚಿತ್ರ ತೆರೆಗೆ ಬರಲಿದೆ ಎಲ್ಲರೂ ನೋಡಿ ಎಂದರು.

ಇದು ನಾನು, ಯೋಗರಾಜ್ ಭಟ್ ಅವರ ಜೊತೆಗೆ ಸೇರಿ ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ. ನಿರ್ಮಾಪಕನಿಗೆ ಒಂದೊಳ್ಳೆ ತಂಡ ಸಿಗುವುಕ್ಕಿಂತ ಮತ್ತೇನು ಬೇಕು. ನನಗೆ ಅಂತಹ ಒಳ್ಳೆಯ ತಂಡ ಸಿಕ್ಕಿದೆ. ಚಿತ್ರ ಕೂಡ ಅಂದು ಕೊಂಡ ಹಾಗೆ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ರವಿ ಶಾಮನೂರು ಹೇಳಿದರು.

ನಿರ್ದೇಶಕ ಅಮೋಲ್ ಪಾಟೀಲ್ ಅವರು, ಉತ್ತರ ಕರ್ನಾಟಕದ ಸೊಗಡನ್ನು ಊಟದಲ್ಲಿ ಉಪ್ಪಿನಕಾಯಿ ಇದ್ದ ಹಾಗೆ ಮಾತ್ರ ಕೆಲವು ಚಿತ್ರಗಳಲ್ಲಿ ಬಳಸಿಕೊಳ್ಳಲಾಗಿತ್ತು. ಆದರೆ ನಮ್ಮ ಚಿತ್ರ ಫುಲ್ ಮೀಲ್ಸ್ ತರಹ ಉತ್ತರ ಕರ್ನಾಟಕದೆ ಸಿನಿಮಾ. ಇಡೀ ಕಥೆ ವಿಜಾಪುರದಲ್ಲೇ ನಡೆಯುತ್ತದೆ. ಉತ್ತರ ಕರ್ನಾಟಕದ ಸುಂದರತೆ ಈ ಚಿತ್ರದಲ್ಲಿದೆ. ನಿರ್ಮಾಪಕರು ಹೇಳಿದ ಹಾಗೆ ಒಂದೊಳ್ಳೆ ತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ನವೆಂಬರ್ 14 ರಂದು ನಿಮ್ಮ ಮುಂದೆ ಬರಲಿದೆ ಎಂದರು.

ಟೀಸರ್ ಹಾಗೂ ಹಾಡುಗಳನ್ನು ಮೆಚ್ಚಿಕೊಂಡಿರುವ ಜನರು ಟ್ರೇಲರ್ ಗೂ ಪ್ರಶಂಸೆ ನೀಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಹೇರಳವಾಗಿ ರೀಲ್ಸ್ ಮಾಡುತ್ತಿದ್ದಾರೆ. ಹೋದ ಕಡೆ ಎಲ್ಲಾ ನನ್ನನ್ನು “ಉಡಾಳ”ನೆಂದೇ ಗುರುತ್ತಿಸುತ್ತಿದ್ದಾರೆ. ಇದನ್ನು ಸಾಧ್ಯವಾಗಿಸಿ ಕೊಟ್ಟ ನನ್ನ ತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ಅನಂತ ಧನ್ಯವಾದ ಎಂದು ನಾಯಕ ಪೃಥ್ವಿ ಶಾಮನೂರು ತಿಳಿಸಿದರು.

ಚಿತ್ರದ ಸಂಗೀತ ನಿರ್ದೇಶಕ ಚೇತನ್ ಡ್ಯಾವಿ, ಗಾಯಕಿ ಸೃಷ್ಟಿ ಶಾಮನೂರು, ಸಂಕಲನಕಾರ ಮಧು ತುಂಬಕೆರೆ ಹಾಗೂ ಚಿತ್ರದಲ್ಲಿ ನಟಿಸಿರುವ ಬಲ ರಾಜ್ ವಾಡಿ, ಬಿರಾದಾರ್ ಸೇರಿದಂತೆ ಅನೇಕ ಕಲಾವಿದರು ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ : ಶಿಗ್ಗಾವಿ‌ಯಲ್ಲಿ ಮೀಟರ್ ಬಡ್ಡಿ ದಂಧೆಕೋರನ ಕಿರುಕುಳ – ಬಾಕಿ ವಸೂಲಿ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ!

Btv Kannada
Author: Btv Kannada

Read More