ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆ, 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15ರಂದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಸಿದ್ದು, ವಕ್ಫ್ ಕಾಯ್ದೆ ವಿಚಾರದಲ್ಲಿ ಯಾವುದೇ ಆದೇಶ ಹೊರಡಿಸುವ ಮುನ್ನ ವಿಚಾರಣೆ ನಡೆಸುವಂತೆ ಕೋರಿದೆ.
ಕೇವಿಯಟ್ ಸಲ್ಲಿಸೋದು ಏಕೆ? ಹೈಕೋರ್ಟ್ಗಳು ಮತ್ತು ಸುಪ್ರೀಂ ಕೋರ್ಟ್ಗಳಲ್ಲಿ ಯಾವುದೇ ಅರ್ಜಿಯ ಬಗ್ಗೆ ವಿಚಾರಣೆ ಮಾಡದೇ ಯಾವುದೇ ಆದೇಶ ಹೊರಡಿಸದಂತೆ ನೋಡಿಕೊಳ್ಳಲು ಕೇವಿಯಟ್ ಅನ್ನು ಸಲ್ಲಿಸಲಾಗುತ್ತದೆ.
ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಗೆ ಏಪ್ರಿಲ್ 5ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ಕೂಡಲೇ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಇಂದು ಅಧಿಸೂಚನೆ ಹೊರಡಿಸಿದೆ.
ಹೊಸದಾಗಿ ಜಾರಿಗೆ ತಂದಿರುವ ವಕ್ಫ್ (ತಿದ್ದುಪಡಿ) ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ರಾಜಕಾರಣಿಗಳು ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ) ಮತ್ತು ಜಮಿಯತ್ ಉಲಮಾ-ಇ-ಹಿಂದ್ ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿವೆ. ಈ ಬೆಳವಣಿಗೆ ಬಗ್ಗೆ ಮಾಹಿತಿ ಹೊಂದಿರುವ ವಕೀಲರು, ಅರ್ಜಿಗಳನ್ನು ಏಪ್ರಿಲ್ 15ರಂದು ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 7ರಂದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಜಮಿಯತ್ ಉಲಮಾ-ಇ-ಹಿಂದ್ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ಅರ್ಜಿಗಳನ್ನು ಪಟ್ಟಿ ಮಾಡುವುದನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು.
ಇದನ್ನೂ ಓದಿ : ಇನ್ಮುಂದೆ 16 ವರ್ಷದೊಳಗಿನ ಮಕ್ಕಳಿಗೆ ಇನ್ಸ್ಟಾಗ್ರಾಮ್ ಲೈವ್ ನಿಷೇಧ – ‘ಮೆಟಾ’ದಿಂದ ಕಟ್ಟುನಿಟ್ಟಿನ ರೂಲ್ಸ್ ಜಾರಿ!
