ಸುಧೀಂದ್ರ ವೆಂಕಟೇಶ್ ನಿರ್ಮಾಣದ “ಫಸ್ಟ್ ಸ್ಯಾಲರಿ”ಗೆ ಪವನ್ ವೆಂಕಟೇಶ್ ನಿರ್ದೇಶನ!

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ, ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನ ಮಾಡಿರುವ “ಫಸ್ಟ್ ಸ್ಯಾಲರಿ” ಫಸ್ಟ್ ಶೋ ಇತ್ತೀಚೆಗೆ ನಡೆಯಿತು‌. ಮೊದಲ ಪ್ರದರ್ಶನದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಶೃತಿ ಹಾಗೂ ಗುರುಗಳಾದ ಕಮಲಾಕರ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಡಿ.ವಿ.ಸುಧೀಂದ್ರ ಅವರು ನನಗೆ ಬಹಳ ಆತ್ಮೀಯರು. ಈಗ ಪಿ.ಆರ್‌.ಓ ವೆಂಕಟೇಶ್ ಪುತ್ರ ಪವನ್ ವೆಂಕಟೇಶ್, “ಫಸ್ಟ್ ಸ್ಯಾಲರಿ” ಕಿರುಚಿತ್ರವನ್ನು ನಿರ್ದೇಶಿಸುವ ಮೂಲಕ ಚಲನಚಿತ್ರ ಕ್ಷೇತ್ರಕ್ಕೆ  ಪಾದಾರ್ಪಣೆ ಮಾಡಿದ್ದಾರೆ. ಕಿರುಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಕಲಾವಿದರು ಕೂಡ ಅದ್ಭುತವಾಗಿ ಅಭಿನಯಿಸಿದ್ದಾರೆ‌. ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಈ ಹುಡುಗನಿಗೆ ಉತ್ತಮ ಅವಕಾಶಗಳು ಸಿಗಲಿ ಎಂದು ರಾಕ್ ಲೈನ್ ವೆಂಕಟೇಶ್ ಹಾರೈಸಿದರು.

ನಾನು ಡಿ.ವಿ.ಸುಧೀಂದ್ರ ಅವರ ನಿರ್ಮಾಣದ “ನಗುನಗುತಾ ನಲಿ” ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ಅವರ ಕುಟುಂಬದ ಪವನ್ ವೆಂಕಟೇಶ್ ಕಿರುಚಿತ್ರ ನಿರ್ಮಾಣ ಮಾಡಿದ್ದಾನೆ. ತಾಯಿ – ಮಗನ ಸೆಂಟಿಮೆಂಟ್ ಸನ್ನಿವೇಶಗಳು ಮನಸ್ಸಿಗೆ ಬಹಳ ಹತ್ತಿರವಾಯಿತು. ಕಣ್ಣಂಚಲಿ ನೀರು ತರಿಸಿತ್ತು ಎಂದು ತಿಳಿಸಿದ ನಟಿ ಶ್ರುತಿ, ನನ್ನ “ಫಸ್ಟ್ ಸ್ಯಾಲರಿ” ಐನೂರು ರೂಪಾಯಿಗಳು ಎಂದು ನೆನಪಿಸಿಕೊಂಡರು.

ಸುಧೀಂದ್ರ ವೆಂಕಟೇಶ್ ಅವರು, ನಮ್ಮ ಚಿಕ್ಕಪ್ಪ ಡಿ.ವಿ.ಸುಧೀಂದ್ರ ಅವರು ಪಾಲುದಾರಿಕೆಯಲ್ಲಿ ಆರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಈಗ ನಾನು ಮೊದಲ ಬಾರಿಗೆ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಮಗ ಪವನ್ ಹಾಗೂ ಸ್ನೇಹಿತರು ಒಂದೊಳ್ಳೆ ಕಿರುಚಿತ್ರ ಮಾಡುತ್ತಿದ್ದೇವೆ ಎಂದು ಹೇಳಿದಾಗ ನಾನು ಅವರ ಜೊತೆಗೆ ನಿಂತೆ. ಕಿರುಚಿತ್ರ ಅವರು ಹೇಳಿದ ಹಾಗೆ ಚೆನ್ನಾಗಿ ಮಾಡಿದ್ದಾರೆ. ಸಮಾರಂಭಕ್ಕೆ ಬಂದು ಪ್ರೋತ್ಸಾಹ ನೀಡಿ ಹಾರೈಸಿದ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರಿಗೆ, ನಟಿ‌ ಶ್ರುತಿ ಅವರಿಗೆ, ಗುರುಗಳಿಗೆ ಹಾಗೂ ಇಡೀ ಮಾಧ್ಯಮದ ಬಳಗಕ್ಕೆ ಧನ್ಯವಾದ ಎಂದರು.

“ಫಸ್ಟ್ ಸ್ಯಾಲರಿ” ನನ್ನ ಗೆಳೆಯ ವಿಜಯ್ ಶಿವಕುಮಾರ್ ಅವರು ಬರೆದ ಕಥೆ. ಈ ಚಿತ್ರದಲ್ಲಿ ಅವರೆ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ, ರಕ್ಷಿತ್ ಇದರಲ್ಲಿ ನಟಿಸಿದ್ದಾರೆ. ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ರಿಚರ್ಡ್ ಡ್ಯಾನಿಯಲ್ ಛಾಯಾಗ್ರಹಣ ಹಾಗೂ ಸಂಕಲನ ಮಾಡಿದ್ದಾರೆ. ಮನೋಜ್ ಕುಮಾರ್ ಮತ್ತು ರವಿ ಸಾಸನೂರು ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ. ನಾನು ನಿರ್ದೇಶಕನಾಗುವ ಕನಸನ್ನು ನನ್ನ ತಂದೆ ಸುಧೀಂದ್ರ ವೆಂಕಟೇಶ್ ಅವರು ಈ ಕಿರುಚಿತ್ರವನ್ನು ನಿರ್ಮಾಣ ಮಾಡುವ ಮೂಲಕ ನನಸು ಮಾಡಿದ್ದಾರೆ. ಹಿರಿಯರಾದ ರಾಕ್ ಲೈನ್ ವೆಂಕಟೇಶ್, ನಟಿ ಶ್ರುತಿ ಹಾಗೂ ಗುರುಗಳಾದ ಕಮಲಾಕರ್ ಅವರು ಬಂದು ಹಾರೈಸಿದ್ದಾರೆ. ಆಗಮಿಸಿದ ಗಣ್ಯರಿಗೆ ಹಾಗೂ ಮಾಧ್ಯಮದವರಿಗೆ ಅನಂತ ಧನ್ಯವಾದಗಳು ಎಂದು ನಿರ್ದೇಶಕ ಪವನ್ ವೆಂಕಟೇಶ್ ತಿಳಿಸಿದರು.

ನಾನು ಕಣ್ಣಾರೆ ಕಂಡ ಅನೇಕ ಸನ್ನಿವೇಶಗಳೆ ಈ ಕಥೆಗೆ ಸ್ಪೂರ್ತಿ ಎಂದು ಮಾತನಾಡಿದ ಕಥೆಗಾರ ಹಾಗೂ ನಟ ವಿಜಯ್ ಶಿವಕುಮಾರ್, ಈ ಕಥೆ ಕೇಳಿದ ಪವನ್ ವೆಂಕಟೇಶ್ ಕಥೆ ಚೆನ್ನಾಗಿದೆ ನಾನೇ ನಿರ್ದೇಶನ ಮಾಡುತ್ತೇನೆ ಎಂದರು. ಸುಧೀಂದ್ರ ವೆಂಕಟೇಶ್ ಅವರು ನಿರ್ಮಾಣ ಮಾಡಿದರು. ನಮ್ಮ ಈ ಮೊದಲ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.

ಕಿರುಚಿತ್ರದಲ್ಲಿ ನಟಿಸಿರುವ ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್ ಸಹ ನಿರ್ದೇಶಕರಾದ ಮನೋಜ್ ಕುಮಾರ್, ರವಿ ಸಾಸನೂರ್ ಹಾಗೂ ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಮುಂತಾದವರು “ಫಸ್ಟ್ ಸ್ಯಾಲರಿ” ಬಗ್ಗೆ ಮಾಹಿತಿ ಹಂಚಿಕೊಂಡರು. ನಿರ್ಮಾಪಕ ಸುರೇಶ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

ಇದನ್ನೂ ಓದಿ : ಮಾನಸಿಕ ಖಿನ್ನತೆಯಿಂದ ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ!

Btv Kannada
Author: Btv Kannada

Read More