ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಬಂಧನದ ಭೀತಿ – ಅಜ್ಞಾತ ಸ್ಥಳದಿಂದಲೇ ಸುಪ್ರೀಂ ಕೋರ್ಟ್ ಮೊರೆ!

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಬಂಧನದ ಭೀತಿಯಿಂದ ಬಿಜೆಪಿ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ. ನಿನ್ನೆಯಷ್ಟೇ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಸಿಐಡಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ.

ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿರುವ ಭೈರತಿ ಬಸವರಾಜ್, ಬೆಳಗಾವಿ ಅಧಿವೇಶನದ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಅವರನ್ನು ಪತ್ತೆಹಚ್ಚಲು ಸಿಐಡಿಯ ಮೂರು ವಿಶೇಷ ತಂಡಗಳು ಹೊರ ರಾಜ್ಯಗಳಲ್ಲೂ ಶೋಧ ನಡೆಸುತ್ತಿವೆ. ಅವರು ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಇಂಟರ್‌ಪೋಲ್ ಮೂಲಕ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

ಬಂಧನ ಭೀತಿಯಲ್ಲಿರುವ ಭೈರತಿ ಬಸವರಾಜ್, ಅಜ್ಞಾತ ಸ್ಥಳದಿಂದಲೇ ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲು ಸಜ್ಜಾಗಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಹೈಪ್ರೊಫೈಲ್ ಆರೋಪಿಯಾಗಿರುವ ಶಾಸಕರನ್ನು ಸೆರೆಹಿಡಿಯಲು ಸಿಐಡಿ ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಇದನ್ನೂ ಓದಿ : ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ ಕೆರಳಿಸಿದ ಕೆ.ಎನ್. ರಾಜಣ್ಣ – ಸಿಎಂ ಜೊತೆ ಮಹತ್ವದ ಸಮಾಲೋಚನೆ!

Btv Kannada
Author: Btv Kannada

Read More