ಬಳ್ಳಾರಿ-ಸಿರುಗುಪ್ಪ ಹೆದ್ದಾರಿಯಲ್ಲಿ ಕಾರು ಅಪಘಾತ – ಒಂದೇ ಕುಟುಂಬದ ಮೂವರು ಸಾವು!

ಬಳ್ಳಾರಿ : ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ಒಂದೇ ಕುಟುಂಬದ ಮೂವರು ಭೀಕರ ರಸ್ತೆ ಅಪಘಾತದಲ್ಲಿ ಬಲಿಯಾಗಿದ್ದಾರೆ. ಬಳ್ಳಾರಿ-ಸಿರುಗುಪ್ಪ ಹೆದ್ದಾರಿಯಲ್ಲಿ ದಟ್ಟ ಮಂಜಿನಿಂದಾಗಿ ರಸ್ತೆ ಕಾಣದೆ ಕಾರು ಕಿರು ಸೇತುವೆಗೆ ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ.

ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ಐವರು ಸದಸ್ಯರು ಕಳೆದ 4 ದಿನಗಳ ಹಿಂದೆ ತಮಿಳುನಾಡಿನ ದೇವಸ್ಥಾನಗಳಿಗೆ ತೆರಳಿ ಮರಳುವಾಗ ಈ ಅಪಘಾತ ಸಂಭವಿಸಿದೆ. ಚಾಲಕ ಪ್ರಸಾದ್ ರಾವ್, ವಿಜಯಾ ಕುಮಾರಿ ಹಾಗೂ ಸಂಧ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರನ್ನು ಬಳ್ಳಾರಿ ಟ್ರಾಮಾ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಟ್ಟ ಮಂಜಿನಿಂದಾಗಿ ರಸ್ತೆ ಕಾಣದೆ ನಿಯಂತ್ರಣ ತಪ್ಪಿದ ಕಾರು ಕಿರು ಸೇತುವೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ತೆಕ್ಕಲಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಬಂಧನದ ಭೀತಿ – ಅಜ್ಞಾತ ಸ್ಥಳದಿಂದಲೇ ಸುಪ್ರೀಂ ಕೋರ್ಟ್ ಮೊರೆ!

Btv Kannada
Author: Btv Kannada

Read More