ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್ನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಸಾಯಿ ಗೋಲ್ಡ್ ಪ್ಯಾಲೆಸ್ನ ಶರವಣ ಅವರು ಈ ಸಮಾರಂಭವನ್ನು ಆಯೋಜಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಸೂತ್ರಧಾರಿ ಚಿತ್ರವನ್ನು ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ಗಳನ್ನು ಆಯೋಜಿಸಿರುವ, ಅಷ್ಟೇ ಅಲ್ಲದೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಜನಪ್ರಿಯರಾಗಿರುವ ನವರಸನ್ ನಿರ್ಮಾಣ ಮಾಡಿದ್ದಾರೆ.
ನಿರ್ಮಾಪಕರಾದ ಚೇತನ್ ಗೌಡ, ಜಗದೀಶ್ ಗೌಡ, ರಾಜೇಶ್ ಹಾಗೂ ಗಜೇಂದ್ರ ಅವರು ಸೇರಿದಂತೆ ಅನೇಕ ಗಣ್ಯರು “ಸೂತ್ರಧಾರಿ” ಚಿತ್ರದ ಶೀರ್ಷಿಕೆ ಗೀತೆ ಅನಾವರಣ ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಮ್ಮ ಪ್ರೋತ್ಸಾಹ ಭರಿತ ಮಾತುಗಳ ಮೂಲಕ “ಸೂತ್ರಧಾರಿ” ಚಿತ್ರಕ್ಕೆ ಯಶಸ್ಸನ್ನು ಕೋರಿದರು. ವಿಜಯ್ ಈಶ್ವರ್ ಅವರು ಬರೆದಿರುವ “ಸೂತ್ರಧಾರಿ” ಚಿತ್ರದ ಶೀರ್ಷಿಕೆ ಗೀತೆಯನ್ನು ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿ ಅವರೆ ಹಾಡಿದ್ದಾರೆ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದಾರೆ. A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಅರ್ಥಗರ್ಭಿತ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ನಮ್ಮ “ಸೂತ್ರಧಾರಿ” ಸಿನಿಮಾ ಆರಂಭವಾದಗಿನಿಂದಲೂ ತಾವೆಲ್ಲರೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇನ್ನೂ ಸದಾ ನನ್ನ ಎಲ್ಲಾ ಕೆಲಸಗಳಿಗೂ ಜೊತೆಗಿದ್ದು, ಪ್ರೋತ್ಸಾಹ ನೀಡುವ ಸಾಯಿ ಗೋಲ್ಡ್ ಪ್ಯಾಲೆಸ್ನ ಶರವಣ, ಚೇತನ್ ಗೌಡ, ಜಗದೀಶ್ ಗೌಡ, ರಾಜೇಶ್, ಗಜೇಂದ್ರ ಮುಂತಾದವರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ವಿಜಯ್ ಈಶ್ವರ್ ಅವರು ಬರೆದಿರುವ ಈ ಚಿತ್ರದ ಟೈಟಲ್ ಸಾಂಗ್ ತುಂಬಾ ಚೆನ್ನಾಗಿದೆ. ಅರ್ಥಗರ್ಭಿತ ಈ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನವರಸನ್ ಹೇಳಿದರು.
ಚಂದನ್ ಶೆಟ್ಟಿ ಅವರು, ನಾನು ನಾಯಕನಾಗಬೇಕೆಂಬ ಆಸೆ ನಮ್ಮ ಅಪ್ಪನದು. ಇದೇ ಮೇ 9 ನೇ ತಾರೀಖು ಅವರ ಆಸೆ ಈಡೇರುತ್ತಿದೆ. ನಾನು ನಾಯಕನಾಗಿ ನಟಿಸಿರುವ ಮೊದಲ ಸಿನಿಮಾ ಬಿಡುಗಡೆಯಾಗುತ್ತಿದೆ. ಗಾಯಕನಾಗಿ ನನ್ನನ್ನು ಎಲ್ಲರೂ ಮೆಚ್ಚಿಕೊಂಡು ಆಶೀರ್ವದಿಸಿದ್ದೀರಿ. ಈಗ ನಾಯಕನಾಗೂ ಮೆಚ್ಚಿಕೊಳ್ಳುತ್ತೀರಾ ಎಂಬ ಭರವಸೆ ಇದೆ. ಈ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಂಜನಾ ಆನಂದ್, ತಬಲ ನಾಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಜಯ್ ಈಶ್ವರ್ ಅವರು ಬರೆದು ನಾನೇ ಹಾಡಿ ಸಂಗೀತವನ್ನೂ ನೀಡಿರುವ ಚಿತ್ರದ ಶೀರ್ಷಿಕೆ ಗೀತೆ ಇಂದು ಬಿಡುಗಡೆಯಾಗಿದೆ. “ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಈ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ ಖುಷಿ ಇದೆ. ಈ ಚಿತ್ರದಲ್ಲಿ ನಾನು ನಾಯಕನಾಗಿ ನಟಿಸಲು ನವರಸನ್ ಅವರೆ ಮುಖ್ಯ ಕಾರಣ ಅವರಿಗೆ ವಿಶೇಷ ಧನ್ಯವಾದ ಎಂದರು.
ಚಿತ್ರದ ನಿರ್ದೇಶಕ ಕಿರಣ್ ಕುಮಾರ್, ನಾಯಕಿ ಅಪೂರ್ವ, ನಟ ತಬಲ ನಾಣಿ ಹಾಗೂ ಹಾಡು ಬರೆದಿರುವ ವಿಜಯ್ ಈಶ್ವರ್ ಮುಂತಾದವರು “ಸೂತ್ರಧಾರಿ” ಕುರಿತು ಮಾಹಿತಿ ಹಂಚಿಕೊಂಡರು.
ಇದನ್ನೂ ಓದಿ : ರಾಜ ಪುನೀತೋತ್ಸವದಲ್ಲಿ ಸಾಧಕರಿಗೆ ಗೌರವ – ಹಿರಿಯ ನಟ ಶ್ರೀನಾಥ್ಗೆ ರಾಜ್ ರತ್ನ, ವೈದ್ಯ ರವೀಂದ್ರನಾಥ್ಗೆ ಪುನೀತ್ ರತ್ನ ಪ್ರಶಸ್ತಿ!
