ಸಕ್ಕರೆ ನಾಡು ಮಂಡ್ಯದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಹೊಸ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕೆಂಬ ಜಿಲ್ಲೆಯ ಜನರ ಬಹುಕಾಲದ ಕನಸು ನನಸಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಮಂಡ್ಯಗೆ ನೂತನ ಕೃಷಿ ವಿಶ್ವವಿದ್ಯಾಲಯ ಘೋಷಣೆ ಮಾಡಿದ್ರು. ಇದೀಗ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕೃಷಿ ವಿವಿಯ ಸ್ಥಾಪನೆಯ ಕಾರ್ಯಗಳು ಭರದಿಂದ ಸಾಗುತ್ತಿವೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ವಿಧೇಯಕ ಅನುಮೋದನೆ ಸಂಬಂಧ ಇಂದು ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ರು. ಸಚಿವ ಎನ್. ಚಲುವರಾಯಸ್ವಾಮಿ ಅವರ ಮನವಿಗೆ ರಾಜ್ಯಪಾಲರು ಸಕರಾತ್ಮಕವಾಗಿ ಸ್ಪಂದಿಸಿದ್ದು ಕೃಷಿ ಕಾಯ್ದೆಗೆ ಅಂತಿಮವಾಗಿ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಫೇಸ್ಬುಕ್ ಸೇರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.
ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕಕ್ಕೆ ಒಪ್ಪಿಗೆ ನೀಡುವಂತೆ ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿರುವ ಗೌರವಾನ್ವಿತ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದಿಸಿರುತ್ತಾರೆ. ಗವರ್ನರ್ ಗೆಹ್ಲೋಟ್ ಅವರಿಗೆ ನಮ್ಮ ಮಂಡ್ಯ ಜಿಲ್ಲೆಯ ಜನತೆ ಹಾಗೂ ಸಮಸ್ತ ರೈತ ಬಾಂಧವರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಖುಷಿ ಹಂಚಿಕೊಂಡ್ರು.
ಈ ವೇಳೆ ಸಚಿವ ಎನ್.ಚಲುವರಾಯಸ್ವಾಮಿಗೆ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾದ ಗೋವಿಂದ ರಾಜು, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಪ್ತ ಕಾರ್ಯದರ್ಶಿಗಳಾದ ಶ್ರೀ ಹೆಚ್. ಜಿ.ಪ್ರಭಾಕರ್, ಮಂಡ್ಯ ಕೃಷಿ ವಿಶ್ವ ವಿದ್ಯಾಲಯ ವಿಶೇಷಾಧಿಕಾರಿ ಹರಿಣಿಕುಮಾರ್, ಹಾಗೂ ವಿಶೇಷ ಕರ್ತವ್ಯಾಧಿಕಾರಿ ಶ್ರೀ ಎ.ಬಿ.ಪಾಟೀಲ್ ಸೇರಿ ಹವಲರು ಉಪಸ್ಥಿತರಿದ್ದರು.
ಇನ್ನು ಮಂಡ್ಯದ ವಿಸಿ ಫಾರ್ಮ್ನಲ್ಲಿ ಸ್ಥಾಪನೆಯಾಗಲಿರುವ ಕೃಷಿ ವಿಶ್ವವಿದ್ಯಾಲಯವು ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಿರುತ್ತದೆ.
ಇದನ್ನೂ ಓದಿ : ಡಿಸಿಎಂ ಡಿಕೆಶಿ ಭೇಟಿಯಾದ ಶಾಸಕ ಹೆಚ್.ಟಿ ಮಂಜು – ಕೆ.ಆರ್ ಪೇಟೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ!
