ಬೆಂಗಳೂರು : ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪುರಸ್ಕೃತ, ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನರಾಗಿದ್ದಾರೆ. 84 ವರ್ಷದ ಕಸ್ತೂರಿ ರಂಗನ್ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಸ್ತೂರಿ ರಂಗನ್ ಅವರು 9 ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಅಪಾರ ಕೊಡುಗೆ ನೀಡಿದ್ದಾರೆ.
ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್ಐಐಟಿ ವಿಶ್ವವಿದ್ಯಾಲಯಗಳಲ್ಲಿ ಮಾಜಿ ಕುಲಪತಿಯಾಗಿದ್ದರು. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಹೌದು. ಅವರು ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಇಸ್ರೋ ಮಾಜಿ ಅಧ್ಯಕ್ಷರ ಅಗಲಿಕೆಗೆ ದೇಶಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಅನೇಕ ದಿಗ್ವಿಜಯಗಳ ಹಿಂದಿನ ಶಕ್ತಿ ಆಗಿದ್ದರು.
ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಅಪರಿಮಿತ ಕೊಡುಗೆ ನೀಡಿದ್ದರು. ರಾಜ್ಯಸಭೆ ಸದಸ್ಯರಾಗಿ ದೇಶದ ಮಹತ್ವಪೂರ್ಣ ನೀತಿಗಳನ್ನು ರೂಪಿಸುವಲ್ಲಿಯೂ ನಿರ್ಣಾಯಕ ಪಾತ್ರ ವಹಿಸಿದ್ದರು. ಕಸ್ತೂರಿ ರಂಗನ್ ಅವರ ಸಾಧನೆಯನ್ನು ಗುರುತಿಸಿದ್ದ ಭಾರತ ಸರ್ಕಾರ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ನೀಡಿ ಗೌರವಿಸಿದೆ.
ಇದನ್ನೂ ಓದಿ : ‘ಗಂಗಾ ಆರತಿ’ ಮಾದರಿಯಲ್ಲಿ ‘ಕಾವೇರಿ ಆರತಿ’ಗೆ ಸಕಲ ಸಿದ್ಧತೆ – KRS ಡ್ಯಾಂನಲ್ಲಿ ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ ಡಿಕೆಶಿ!
