‘One Minute Apology’ ಪುಸ್ತಕ ಓದಿ – ರೂಪಾ, ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ!

ಬೆಂಗಳೂರು : ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕಾನೂನು ಹೋರಾಟದಲ್ಲಿ ಮುಳುಗಿರುವ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘One Minute Apology’ ಎಂಬ ಇಂಗ್ಲಿಷ್ ಪುಸ್ತಕ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.

ರೂಪಾ ಅವರು 2023ರ ಫೆ.18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್ ಪ್ರಕಟಿಸಿ ತೇಜೋವಧೆ ಮಾಡಿದ್ದಾರೆ. ಅವರಿಂದ 1 ಕೋಟಿ ರೂ. ಪರಿಹಾರವಾಗಿ ಕೊಡಿಸಿಕೊಡಬೇಕು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಕ್ತ ದಂಡನೀಯ ಕೋರಿ ರೋಹಿಣಿ 2023ರ ಮಾ.3ರಂದು ಮ್ಯಾಜಿ ಸ್ಟೇಟ್ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಿದ್ದರು.

ಈ ಪ್ರಕರಣ ಬುಧವಾರ 5ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ವಿಜಯ ಕಮಾರ್ ಜಾಟ್ಲಾ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ರೋಹಿಣಿ ಮತ್ತು ರೂಪಾ ಉಪಸ್ಥಿತರಿದ್ದರು. ರೋಹಿಣಿ ಮನವಿ ಮೇರೆಗೆ ಪಾಟಿ ಸವಾಲು ಪ್ರಕ್ರಿಯೆಯನ್ನು ನ್ಯಾಯಾಲಯ ಗೌಪ್ಯವಾಗಿ (ಇನ್-ಕ್ಯಾಮರಾ ಪ್ರೊಸಿಡಿಂಗ್ಸ್) ನಡೆಸಿತು. ರೂಪಾ ಪರ ವಕೀಲ ಪಿ.ಪ್ರಸನ್ನ ಕುಮಾ‌ರ್ ಅವರು ಸುಮಾರು 45 ನಿಮಿಷಗಳ ಕಾಲ ರೋಹಿಣಿ ಅವರನ್ನು ಪಾಟಿ ಸವಾಲಿಗೆ ಗುರಿಪಡಿಸಿದರು. 

ನಂತರ ರೋಹಿಣಿ ಮತ್ತು ರೂಪಾರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘ನೀವಿಬ್ಬರೂ ಸರ್ಕಾರದಲ್ಲಿ ಹಿರಿಯ ಅಧಿಕಾರಿಗಳಾಗಿದ್ದೀರಿ. ಉತ್ತಮ ಹೆಸರು ಗಳಿಸಿದ್ದೀರಿ. ನೀವು ಸಮಾಜಕ್ಕೆ ಸೇವೆ ಮಾಡಬೇಕಿದೆ. ನಿಮ್ಮ ಸಮಯವನ್ನು ಸಮಾಜ ಮತ್ತು ಸಾರ್ವಜನಿಕರ ಸೇವೆಗೆ ಬಳಸಬೇಕಿದೆ. ಅದು ಬಿಟ್ಟು ಕೋರ್ಟ್ ಕಲಾಪಕ್ಕೆ ಬಂದು ನಿಮ್ಮ ಅಮೂಲ್ಯವಾದ ಸಮಯ ವ್ಯರ್ಥ ಮಾಡುವಂತಾಗಬಾರದು. ಹಾಗಾಗಿ, ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಆಲೋಚಿಸಿ. ಇದನ್ನು ನಾನು ನಿಮಗೆ ಹೇಳುವ ಅಗತ್ಯವಿಲ್ಲ. ಆದರೆ, ಸಮಾಜದ ಹಿತ ದೃಷ್ಟಿಯಿಂದ ಹೇಳಿದ್ದೇನೆ ಅಷ್ಟೇ. ನೀವು ಯೋಚಿಸಿ ನಿರ್ಧಾರದ ತಿಳಿಸಿದರೆ, ಅದರಂತೆ ಪ್ರಕರಣವನ್ನು ನ್ಯಾಯಾಲಯ ಮುಂದುರಿಸಲಿದೆ’ ಎಂದು ತಿಳಿಸಿದರು. 

ಅಲ್ಲದೆ, ಇಂಗ್ಲಿಷ್‌ನಲ್ಲಿ ‘One Minute Apology’ ಪುಸ್ತಕ ಇದೆ. ಅದನ್ನು ನೀವಿಬ್ಬರು ಓದಿ. ಅದರಿಂದ ನಿಮಗೆ ಏನಾದರೂ ಪ್ರಯೋಜನವಾಗಬಹುದು ಎಂದು ನ್ಯಾಯಾಧೀಶರು ರೂಪಾ ಮತ್ತು ರೋಹಿಣಿ ಅವರಿಗೆ ಸಲಹೆ ನೀಡಿ, ವಿಚಾರಣೆಯನ್ನು ಫೆ.12ಕ್ಕೆ ಮುಂದೂಡಿದರು.

ಇದನ್ನೂ ಓದಿ : https://btvkannada.com/2025/02/06/vijayendra-bjp-bommai-president/

Btv Kannada
Author: Btv Kannada

Read More

Read More