ಬೆಂಗಳೂರು : ‘ಹನಿಟ್ರ್ಯಾಪ್’ ಮಾಡಲೆತ್ನಿಸಿದ ಆರೋಪಕ್ಕೆ ಸಂಬಂಧಪಟ್ಟ ಪ್ರಕರಣದಲ್ಲಿ ಎಂಎಲ್ಎ ಮುನಿರತ್ನ ವಿರುದ್ಧ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಐಡಿಯ ವಿಶೇಷ ತನಿಖಾ ತಂಡವು (ಎಸ್ಐಟಿ) ಷರಾ ಬರೆದಿದೆ. ಈ ಮೂಲಕ ಶಾಸಕ ಮುನಿರತ್ನ ಅವರಿಗೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ.
BBMP ಮಾಜಿ ಕಾರ್ಪೋರೇಟರ್ ಮಂಜುಳಾ ಅವರ ಪತಿ ಲಗ್ಗೆರೆ ನಾರಾಯಣಸ್ವಾಮಿ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ ಸಂಬಂಧ ದಾಖಲಾಗಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ, ಶಾಸಕ ಮುನಿರತ್ನ ಹಾಗೂ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದಿದೆ. ಅಲ್ಲದೆ, ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದೆ ಎಂದು ತಿಳಿದುಬಂದಿದೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಮುನಿರತ್ನ ವಿರುದ್ಧ ಲೈಂಗಿಕ ಹಗರಣದ ಆರೋಪದಡಿ ಕಳೆದ ವರ್ಷ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಇದರ ಬೆನ್ನಲ್ಲೇ 2024ರ ಡಿಸೆಂಬರ್ನಲ್ಲಿ ನಂದಿನಿ ಲೇಔಟ್ ಠಾಣೆಗೆ ದೂರು ಕೊಟ್ಟಿದ್ದ ಲಗ್ಗೆರೆ ನಾರಾಯಣಸ್ವಾಮಿ, ”ಶಾಸಕ ಮುನಿರತ್ನ ಅವರು ತಮ್ಮ ಬೆಂಬಲಿಗರ ಮೂಲಕ ನನ್ನನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದರು,” ಎಂದು ಆರೋಪಿಸಿದ್ದರು. ಈ ಸಂಬಂಧ ಮುನಿರತ್ನ ಮತ್ತು ಅವರ ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಎಸ್ಐಟಿ ತನಿಖೆಗೆ ನೀಡಲಾಗಿತ್ತು.
ಮೂರು ಪ್ರಕರಣದಲ್ಲಿ ಚಾರ್ಜ್ಶೀಟ್ : ಶಾಸಕ ಮುನಿರತ್ನರ ವಿರುದ್ಧ ಕಳೆದ ವರ್ಷ ಅತ್ಯಾಚಾರ, ಜಾತಿ ನಿಂದನೆ ಹಾಗೂ ಸುಲಿಗೆ, ಜೀವ ಬೆದರಿಕೆ ಸೇರಿದಂತೆ ನಾನಾ ಆರೋಪಗಳಡಿ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಈ ಐದೂ ಪ್ರಕರಣಗಳನ್ನು ಸಿಐಡಿ ಎಸ್ಐಟಿ ತನಿಖೆ ನಡೆಸಿದೆ. ಈ ಪೈಕಿ ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷ್ಯಾಧಾರ ಸಿಕ್ಕಿದ್ದು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿದೆ. ಹನಿಟ್ರ್ಯಾಪ್ ಯತ್ನ ಪ್ರಕರಣದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಕೆಯಾಗಿದೆ. ಉಳಿದ ಎರಡು ಪ್ರಕರಣಗಳ ತನಿಖೆಯು ಅಂತಿಮ ಹಂತದಲ್ಲಿವೆ. ಈ ಪ್ರಕರಣಗಳಲ್ಲಿ ಹೈಕೋರ್ಟ್ನಿಂದ ಜಾಮೀನು ಪಡೆದು ಜೈಲಿಂದ ಹೊರಗಿದ್ದ ಶಾಸಕ ಮುನಿರತ್ನ ಅವರಿಗೆ ಇನ್ನು ಆತಂಕ ದೂರವಾಗಿದೆ. ಇನ್ನೆಡರು ಪ್ರಕರಣದಗಳಲ್ಲಿ ತನಿಖಾ ವರದಿ ಏನಿದೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ : ಪಂಜಾಬ್ ಕಿಂಗ್ಸ್ಗೆ ರೋಚಕ ಜಯ – ಟೂರ್ನಿಯಿಂದ ಮೊದಲ ತಂಡವಾಗಿ ಹೊರಬಿದ್ದ CSK!
