ಮಾಜಿ ಸಚಿವ ಪುಟ್ಟರಂಗಶೆಟ್ಟಿಗೆ ಲೋಕಾಯುಕ್ತ ನೋಟಿಸ್!

ಬೆಂಗಳೂರು : ಆರು ವರ್ಷಗಳ ಹಿಂದೆ ವಿಧಾನಸೌಧ ಪ್ರವೇಶ ದ್ವಾರದಲ್ಲಿ ಪತ್ತೆಯಾದ 25.76 ಲಕ್ಷ ರೂ. ನಗದು ಪ್ರಕರಣ ಸಂಬಂಧ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ಸೇರಿ ಆರು ಮಂದಿಗೆ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಪುಟ್ಟರಂಗಶೆಟ್ಟಿ, ಮಂಜುನಾಥ್, ಕೃಷ್ಣಮೂರ್ತಿ, ಶ್ರೀನಿಧಿ, ಅನಂತ ಶಂಕರ್, ನಂದನ್ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

2019 ರ ಜನವರಿಯಲ್ಲಿ ವಿಧಾನಸೌಧದಲ್ಲಿ ಪುಟ್ಟರಂಗ ಶೆಟ್ಟಿ ಅವರ ಆಪ್ತ ಸಹಾಯಕ ಮೋಹನ್ ಕುಮಾರ್ ಅವರಿಂದ 25.76 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಮೋಹನ್ ಕುಮಾರ್ ಸೇರಿ ಆರೇಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಈ ಪ್ರಕರಣದಲ್ಲಿ ಸಚಿವರು ಮತ್ತು ಗುತ್ತಿಗೆದಾರರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ಬಳಿಕ ಹೆಚ್ಚಿನ ತನಿಖೆಗಾಗಿ ಎಸಿಬಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು. ಬಳಿಕ ಲೋಕಾಯುಕ್ತ ಪೊಲೀಸರಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮೋಹನ್ ಕುಮಾರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿ, ಇತರೆ ಆರೋಪಿಗಳನ್ನು ಕೈಬಿಟ್ಟು, ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ಅವರನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು.

ಈ ಮಧ್ಯೆ ಕಳೆದ ಫೆಬ್ರವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಪ್ರಕರಣದ ತನಿಖೆ ಅಪೂರ್ಣವಾಗಿದ್ದು, ಈ ಹಿಂದೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಆಕ್ಷೇಪಿಸಿತ್ತು. ಜತೆಗೆ ಪ್ರಕರಣದ ಹೆಚ್ಚಿನ ತನಿಖೆ ನಡೆಸಿ ಮೂರು ತಿಂಗಳ ಒಳಗೆ ವರದಿ ನೀಡುವಂತೆ ಸೂಚಿಸಿತ್ತು. ಈ ಬೆನ್ನಲ್ಲೇ ಪುಟ್ಟರಂಗ ಶೆಟ್ಟಿ ಸೇರಿ ಅವರಿಗೆ ಆರು ಮಂದಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : 1971ರ ನಂತರ ನಾಳೆ ದೇಶದಲ್ಲಿ ಯುದ್ದದ ಡ್ರಿಲ್‌ – ಹೇಗಿರಲಿದೆ ಮಾಕ್‌ ಡ್ರಿಲ್‌?

Btv Kannada
Author: Btv Kannada

Read More