ಬೆಂಗಳೂರು : ಭಾರತ-ಪಾಕ್ ನಡುವೆ ಸಂಘರ್ಷ ನಡೆಯುತ್ತಿದ್ದು, ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಾಗಾಗಿ ರಾಜ್ಯದಲ್ಲಿ ಕಟ್ಟೆಚ್ಚರವಹಿಸುವಂತೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ಹಿನ್ನಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆದಿದೆ.
ಈ ವೇಳೆ ರಾಜ್ಯದಲ್ಲಿ ಕಟ್ಟೆಚ್ಚರವಹಿಸುವ ಕುರಿತು ಚರ್ಚೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು, ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು. ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ, ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಬೇಕು. ಇನ್ನು ಪ್ರಮುಖ ಸ್ಥಳಗಳಲ್ಲಿ Mock Drill ಮಾಡಬೇಕು. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ, ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್, ಸೈಬರ್ ಎಡಿಜಿಪಿ ಪ್ರಣಬ್ ಮೊಹಂತಿ, ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ, ಗೃಹ ಇಲಾಖೆಯ ಕಾರ್ಯದರ್ಶಿ, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನು ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ವಿಭಾಗವಾರು ಐಜಿಪಿಗಳು, ಡಿಸಿ ಎಸ್ಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಹಾಜರಾಗಿದ್ದರು.

ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ :
- ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರಬೇಕು.
- ಈ ಕುರಿತು ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು.
- ಪ್ರಮುಖ ಸ್ಥಳಗಳಲ್ಲಿ Mock Drill ಮಾಡಬೇಕು
- ರಾಷ್ಟ್ರೀಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕಾಪಾಡಲು ಸೂಚನೆ
ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು :
- ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ವಹಿಸಬೇಕು.
- ವದಂತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
- ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಫ್ಯಾಕ್ಟ್ ಚೆಕ್ ನಿರಂತರವಾಗಿ ಮಾಡಬೇಕು.
- ಸುಳ್ಳು ಸುದ್ದಿ ಬಗ್ಗೆ ಮೂಲದಲ್ಲೇ ಅಧಿಕೃತ ಸ್ಪಷ್ಟೀಕರಣ ನೀಡಬೇಕು.
ಗುಪ್ತಚರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು :
- ಸಾರ್ವಜನಿಕ ಸೇವೆ ಒದಗಿಸುವ ತಾಣಗಳಲ್ಲಿ ಹೆಚ್ಚಿನ ಸುರಕ್ಷತೆಯನ್ನು ಖಾತ್ರಿಪಡಿಸಬೇಕು.
- ಅಕ್ರಮ ದಾಸ್ತಾನು ಮತ್ತು ಕಾಳಸಂತೆಯ ಮೇಲೆ ನಿರಂತರ ನಿಗಾವಹಿಸಿ.
- ಅನಗತ್ಯವಾಗಿ ಸಾಮಾಗ್ರಿಗಳ ಬೆಲೆ ಹೆಚ್ಚು ಮಾಡುವ ಪ್ರಯತ್ನಗಳನ್ನು ತಡೆಯಬೇಕು.
ಇದನ್ನೂ ಓದಿ : ಭಾರತ-ಪಾಕ್ ಯುದ್ಧ ಸಂಘರ್ಷ.. ನೇಪಾಳ, ಉತ್ತರ ಭಾರತದ “ವಿಜಯ ಯಾತ್ರೆ” ಮುಂದೂಡಿದ ಶೃಂಗೇರಿ ಶ್ರೀಗಳು!

Author: Btv Kannada
Post Views: 162