ಮಂಡ್ಯ : ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಶವ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಇರುವ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೈಸೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ ಮೇ 07ರಂದು ಮನೆಯಿಂದ ನಾಪತ್ತೆಯಾಗಿದ್ದರು. ಸದ್ಯ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನಿನ್ನೆ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಬಂದು ಶವ ಮೇಲೆ ತೆಗೆದು ನೋಡಿದಾಗ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಗುರುತು ಪತ್ತೆ ಆಗಿದೆ. ನದಿ ದಡದಲ್ಲಿ ವಿಜ್ಞಾನಿ ಅಯ್ಯಪ್ಪನ್ ಅವರ ಸ್ಕೂಟರ್ ಕೂಡ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ಬಣ್ಣ ಅಯ್ಯಪ್ಪನ್ ಮನೆಯಿಂದ ಹೊರಗೆ ಹೋದರವರು ವಾಪಸ್ಸ್ ಆಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ : ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿ ವಾಸಿಸುತ್ತಿದ್ದರು. ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ : ನಾವು ಭಾರತದ ವಿರುದ್ಧ ಯುದ್ಧದಲ್ಲಿ ಗೆದ್ದಿದ್ದೇವೆ – ಮತ್ತೆ ಸುಳ್ಳಿನ ಕಥೆ ಕಟ್ಟಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್!
