ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ (ಫೆ.8) ಇಂದು ಪ್ರಕಟವಾಗಲಿದೆ. ಆಡಳಿತರೂಢ ಎಎಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಯುವ ಕನಸು ಕಾಣುತ್ತಿದ್ದು, ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದೆ. ಸುದೀರ್ಘ ಕಾಲದಿಂದ ಅಧಿಕಾರದಿಂದ ದೂರ ಉಳಿದಿರುವ ಬಿಜೆಪಿ ಅಧಿಕಾರಕ್ಕೇರಲು ಹವಣಿಸುತ್ತಿದ್ದರೆ, ಕಾಂಗ್ರೆಸ್ ಕೂಡ ತನ್ನದೇ ಲೆಕ್ಕಾಚಾರಗಳನ್ನು ಹಾಕಿಕೊಂಡು ಕುಳಿತಿದೆ.
ಇವೆಲ್ಲದರ ನಡುವೆ ಮತಗಟ್ಟೆ ಸಮೀಕ್ಷೆಗಳು ದಿಲ್ಲಿ ವಿಧಾನಸಭೆಯಲ್ಲಿ 27 ವರ್ಷದ ಬಳಿಕ ಬಿಜೆಪಿ ಮರಳಿ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಆಮ್ ಆದ್ಮಿ ಪಕ್ಷದ ಸಂಚಾಲಕ (ಆಪ್) ಅರವಿಂದ್ ಕೇಜ್ರಿವಾಲ್ ಕನಸು ಭಗ್ನಗೊಳ್ಳಲಿದೆ. ಕಾಂಗ್ರೆಸ್ ಮತ್ತೊಮ್ಮೆ ಹೀನಾಯ ಸೋಲು ಅನುಭವಿಸಲಿದೆ ಎಂದು ಸಮೀಕ್ಷೆಗಳು ಅಂದಾಜಿಸಿವೆ.
ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲು ವಿಫಲವಾಗಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಅನಿರೀಕ್ಷಿತ ಯಶಸ್ಸು ದಾಖಲಿಸಲಿದೆ ಎಂಬುದು ಸಮೀಕ್ಷೆಗಳ ಸಾರವಾಗಿದೆ. 13ಕ್ಕೂ ಹೆಚ್ಚು ಮತಗಟ್ಟೆ ಸಮೀಕ್ಷೆಗಳಲ್ಲಿ ಬಿಜೆಪಿ 35 ರಿಂದ 60 ಸ್ಥಾನಗಳವರೆಗೆ ಗೆಲ್ಲಬಹುದು ಎಂದು ಅಂದಾಜು ಮಾಡಲಾಗಿದೆ. ಈಗಾಗಲೇ ಮತಎಣಿಕೆ ಪ್ರಕ್ರಿಯೆ ಶುರುವಾಗಿರುವ ಹಿನ್ನೆಲೆಯಲ್ಲಿ ಎಲ್ಲರ ಎದೆಯಲ್ಲಿ ಢವಢವ ಶುರುವಾಗಿದೆ.
ಸದ್ಯ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಬಹುತೇಕ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಹೇಳಲಾಗಿದ್ದರೂ ಸಹ, ಈ ಸಮೀಕ್ಷಾ ವರದಿಗಳನ್ನು ಆಪ್ ತಿರಸ್ಕರಿಸಿದ್ದು, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.
ಇನ್ನು ಮತಎಣಿಕ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ತೆ ಕೈಗೊಳ್ಳಲಾಗಿದ್ದು, ನಾಲ್ಕು ಹಂತಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ. ದೆಹಲಿ ಪೊಲೀಸರು ಮತ ಎಣಿಕೆ ಕೇಂದ್ರವನ್ನು ಸಂಪೂರ್ಣವಾಗಿ ಸುತ್ತುವರಿದಿದ್ದಾರೆ.
ಇದನ್ನೂ ಓದಿ : http://ದಿಢೀರ್ ಹೃದಯಾಘಾತ.. ನವಗ್ರಹ ಸಿನಿಮಾ ‘ಶೆಟ್ಟಿ’ ಖ್ಯಾತಿಯ ನಟ ಗಿರಿ ದಿನೇಶ್ ನಿಧನ!
