ಬೆಂಗಳೂರು : ಲೋಕಸಭೆ ಚುನಾವಣಾ ಅಖಾಡ ರಂಗೇರಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ಮೆರವಣಿಗೆಯಲ್ಲಿ ಬಂದು ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಭಾಗಿಯಾಗಿದ್ದಾರೆ. ಈ ವೇಳೆ ಡಿ.ಕೆ ಸುರೇಶ್ ಸಿದ್ದರಾಮಯ್ಯವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ನಾಮಪತ್ರ ಸಲ್ಲಿಕೆ ವೇಳೆ ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್, ಸಚಿವ ರಾಮಲಿಂಗಾರೆಡ್ಡಿ, ಶಾಸಕ ಆನೇಕಲ್ ಶಿವಣ್ಣ, ಶಾಸಕ ಹೆಚ್.ಸಿ ಬಾಲಕೃಷ್ಣ, ಮುಖಂಡ ಗಂಗಾಧರ್ ಸೂಚಕರಾಗಿ ಭಾಗಿಯಾಗಿದ್ದರು. ಡಿ.ಕೆ ಸುರೇಶ್ ರಾಮನಗರದಲ್ಲಿ ಬೃಹತ್ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಡಿ.ಕೆ.ಸುರೇಶ್ ಮನೆದೇವರಿಗೆ ಪೂಜೆ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಕನಕಪುರದ ಕೆಂಕೆರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ರಾಮನಗರದ ಚಾಮುಂಡೇಶ್ವರಿ ದೇವರ ದರ್ಶನ ಪಡೆದರು. ನಗರದ ಪ್ರಮುಖ ಮಸೀದಿ, ಚರ್ಚ್ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಮನೆಯಲ್ಲಿ ಅಣ್ಣ ಡಿ.ಕೆ.ಶಿವಕುಮಾರ್ ಹಾಗೂ ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದ ಮುಂದೆ ಡಿ.ಕೆ.ಸುರೇಶ್ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ತಮಟೆ, ವಾದ್ಯ, ಪಟ್ಟದ ಕುಣಿತ, ವೀರಗಾಸೆ ಮೂಲಕ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ಗೆ ಸ್ವಾಗತ ಕೋರಿದರು.
ಇದನ್ನೂ ಓದಿ : ಕರ್ನಾಟಕ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು..!