ಬೆಂಗಳೂರು : ತಮಿಳುನಾಡು ಹಾಗೂ ಪುದುಚೇರಿಯಲ್ಲಿ ತಲ್ಲಣ ಸೃಷ್ಟಿಸಿದ್ದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕದ ಬಾಗಿಲಿಗೂ ಬಂದಿದೆ. ಸೈಕ್ಲೋನ್ ಪರಿಣಾಮ ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇವತ್ತು ಮತ್ತಷ್ಟು ಜೋರಾಗುವ ಸಾಧ್ಯತೆಯಿದೆ. ಅರಬ್ಬೀ ಸಮುದ್ರದತ್ತ ಹೊರಟಿರುವ ಫೆಂಗಲ್ ಚಂಡಮಾರುತ ಈಗ ಕರ್ನಾಟಕದಲ್ಲೂ ಕಂಪನ ಸೃಷ್ಟಿಸಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣದ ರಾಜ್ಯಗಳಲ್ಲಿ ಇಂದು ಮಳೆರಾಯ ಅಬ್ಬರಿಸುವ ಸಾಧ್ಯತೆಯಿದೆ.
ಈ ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆ ಗಾಳಿ ಹಾಗೂ ಚಳಿ ಅಬ್ಬರ ಜೋರಾಗಿದೆ. ಈಗಾಗಲೇ ಮಂಡ್ಯ, ಮೈಸೂರು, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಕೋಲಾರದಲ್ಲೂ ಸೈಕ್ಲೋನ್ನಿಂದ ಅವಾಂತರ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯುವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಥಂಡಿ ಜೊತೆಗೆ ಮಳೆಯಿಂದ ಕಾಫಿ ಬೀಜ ಒಳಗಿಸುವುದು ಸವಾಲಾಗಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಹೂ, ಹಣ್ಣು ತರಕಾರಿ ಬೆಳೆಗಳು ನೆಲಕಚ್ಚಿವೆ. ರಾಗಿ ಬೆಳೆ ಮೊಳಕೆ ಹೊಡೆಯಲು ಆರಂಭಿಸಿದೆ. ಚಿತ್ರದುರ್ಗದಲ್ಲಿ ಕಡಲೆ, ಮೆಕ್ಕೆಜೋಳ, ತೊಗರಿ ಮತ್ತಿತರೆ ಬೆಳೆಗಳಿಗೆ ಚಂಡಮಾರುತ ಹೊಡೆತ ನೀಡಿದೆ.
ಉಡುಪಿ ಜಿಲ್ಲೆಯಲ್ಲೂ ಸೋಮವಾರ ಸಂಜೆಯಿಂದಲೇ ಭಾರೀ ಮಳೆಯಾಗುತ್ತಿದೆ. ಉಡುಪಿ ನಗರ, ಕಾರ್ಕಳ, ಕುಂದಾಪುರ, ಕಾಪು, ಬೈಂದೂರು ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಎಲ್ಲೆಲ್ಲಿ ಫೆಂಗಲ್ ಎಫೆಕ್ಟ್? ಕರ್ನಾಟಕದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಪರಿಣಾಮ ಆಗಲಿದೆ ಎಂಬ ಮುನ್ಸೂಚನೆ ಇದೆ. ಇನ್ನು, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉತ್ತರಕನ್ನಡ, ತುಮಕೂರು, ಹಾವೇರಿ ಜಿಲ್ಲೆಗಳ ಮೇಲೂ ನಿಗಾ ಇಡುವಂತೆ ಕೇಂದ್ರ ಹವಾಮಾನ ಇಲಾಖೆ ಹೇಳಿದೆ.
ಎಲ್ಲೆಲ್ಲಿ ರಜೆ? ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಇಂದು ಲೋಕಾಯುಕ್ತ ಪೊಲೀಸರಿಂದ ಸಚಿವ ಜಮೀರ್ ಅಹ್ಮದ್ ವಿಚಾರಣೆ..!