ರಾಜ್ಕೋಟ್ : ಗುಜರಾತಿನ ರಾಜ್ಕೋಟ್ನಲ್ಲಿರುವ TRP ಗೇಮಿಂಗ್ ಜೋನ್ನಲ್ಲಿ ನಿನ್ನೆ ಮಧ್ಯಾಹ್ನದ ಹೊತ್ತಿಗೆ ಭೀಕರ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 12 ಮಕ್ಕಳು, ಮಹಿಳೆಯರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾರಾಂತ್ಯದ ಹಿನ್ನೆಲೆಯಲ್ಲಿ ರಜೆ ಕಳೆಯಲು ನೂರಾರು ಕುಟುಂಬಗಳು ಮಕ್ಕಳ ಸಮೇತ ಈ ಗೇಮಿಂಗ್ ಝೋನ್ಗೆ ಆಗಮಿಸಿದ್ದವು. ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿಯ ಜ್ವಾಲೆಗಳು ಇಡೀ ಕಟ್ಟಡವನ್ನು ಆವರಿಸಿಕೊಂಡಿತು. ನೋಡನೋಡುತ್ತಿದ್ದಂತೆಯೇ ಸ್ಮಶಾನ ಸದೃಶ್ಯ ಸ್ಥಿತಿ ನಿರ್ಮಾಣವಾಗಿತ್ತು ಎಂದು ಸ್ಥಳೀಯರು ಅನುಭವ ಹಂಚಿಕೊಂಡಿದ್ದಾರೆ.
ಪ್ರಕರಣದ ಬೆನ್ನಲ್ಲೇ ಅಗ್ನಿ ಸುರಕ್ಷತೆ ಕಡೆಗಣಿಸಿದ ಆರೋಪದ ಮೇರೆಗೆ ಗೇಮಿಂಗ್ ಜೋನ್ ಮಾಲೀಕ ಯುವರಾಜ್ ಸಿಂಗ್ ಸೋಲಂಕಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
“ದುರಂತದಲ್ಲಿ 12 ಮಕ್ಕಳು, ಮಹಿಳೆಯರೂ ಸೇರಿದಂತೆ 28 ಜನ ಮೃತಪಟ್ಟಿದ್ದಾರೆ. ಸುಟ್ಟು ಕರಕಲಾಗಿರುವ ಮೃತದೇಹಗಳ ಗುರುತು ಪತ್ತೆ ಕಾರ್ಯ ಸಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ,’’ ಎಂದು ರಾಜ್ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ ಮಾಹಿತಿ ನೀಡಿದ್ದಾರೆ.
ಸಿಎಂ ಭೂಪೇಂದ್ರ ಪಟೇಲ್ ಅವರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಈ ಸಂಬಂಧ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, “ರಾಜ್ಕೋಟ್ನ ಗೇಮ್ ಝೋನ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಪಾಲಿಕೆ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಲು ಹೇಳಿದ್ದೇನೆ,” ಎಂದಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ‘X’ನಲ್ಲಿ ಪೋಸ್ಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಜಿ.ವಿ. ರಾಜೇಶ್ ಕಿಕ್ ಔಟ್..!