ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಕೇಸರಿ ಶಾಲು ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಲ್ಲದೆ, ಜೈ ಶ್ರೀರಾಮ್ ಘೋಷವಾಕ್ಯದೊಂದಿಗೆ ಭಾಷಣ ಪ್ರಾರಂಭಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರೇ ಹೆಸ್ರಲ್ಲಿ ರಾಮ ಇದ್ದರೆ ಸಾಕಾ..? ನಿಮ್ಮ ನಡೆ, ಸಂಸ್ಕೃತಿಯಲ್ಲೂ ರಾಮನ ಆದರ್ಶ ಇರಬೇಕು. ಹನುಮ ಧ್ವಜ ಮಾತ್ರವಲ್ಲ, ರಾಷ್ಟ್ರಧ್ವಜಕ್ಕೂ ಅಪಮಾನವಾಗಿದೆ. ಪೊಲೀಸರೇ ಹೆಚ್ಚು ಕಾಲ ಇದು ನಡೆಯಲ್ಲ. ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡಬೇಡಿ ಎಂದು ಮಂಡ್ಯದಲ್ಲಿ ಸರ್ಕಾರದ ವಿರುದ್ಧ ಹೆಚ್ಡಿಕೆ ಗುಡುಗಿದ್ದಾರೆ. ಧ್ವಜದ ವಿಚಾರದಲ್ಲಿ ನಾವು ರಾಜಕೀಯ ಮಾಡ್ತಿಲ್ಲ.
ಜಿಲ್ಲಾಡಳಿತದ ಅವಿವೇಕತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದು ಹೆಚ್.ಡಿಕೆ ಹೆಳಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ನಾಯಕ ಸಿಟಿ ರವಿ, ಮಹಾಭಾರತ ಯುದ್ಧದ ಸಮಯದಲ್ಲಿ ಕೃಷ್ಣಾರ್ಜುನರ ರಥದ ಮೇಲೆ ಇದ್ದಿದ್ದು ಹನುಮಂತನ ಧ್ವಜ. ಆ ಧ್ವಜ ತೆಗೆದ ನಂತರ ರಥವೇ ಭಸ್ಮವಾಯಿತು. ಅದೇ ರೀತಿ ಕಾಂಗ್ರೆಸ್ ಹನುಮ ಧ್ವಜ ತೆಗೆದಿದ್ದು, ಅದು ಕೂಡ ಭಸ್ಮವಾಗಲಿದೆ ಎಂದು ಹೇಳಿದ್ದಾರೆ.
ಏನಿದು ಮಂಡ್ಯದ ಹನುಮಧ್ವಜ ಕೇಸ್? ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಗ್ರಾಮದ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನೆಪಾಗಿ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರ ಧ್ವಜಸ್ತಂಭದ ಮೇಲೆ ಹನುಮ ಧ್ವಜ ಹಾರಿಸಲು ಗ್ರಾಮಸ್ಥರು ನಿರ್ಧರಿಸಿದ್ದರು. ಧ್ವಜ ಹಾರಿಸಲು ನಿಶ್ಚಯಿಸಿದ ಜಾಗ ಗ್ರಾಮ ಪಂಚಾಯಿತಿಗೆ ಸೇರಿದ್ದರಿಂದ ಅನುಮತಿ ಕೋರಿ ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು. ಆದರೆ, ಗ್ರಾಮ ಪಂಚಾಯಿತಿ “ರಾಷ್ಟ್ರ ಧ್ವಜ ಮತ್ತು ನಾಡಧ್ವಜ” ಹೊರತುಪಡಿಸಿ ಯಾವುದೇ ಧಾರ್ಮಿಕ/ ರಾಜಕೀಯ ಧ್ವಜವನ್ನು ಹಾರಿಸುವಂತಿಲ್ಲವೆಂದು ಅನುಮತಿಯನ್ನು ನಿರಾಕರಣೆ ಮಾಡಿತ್ತು.
ಇದನ್ನೂ ಓದಿ : ಇದೆಲ್ಲಾ ಎಲೆಕ್ಷನ್ ಗಿಮಿಕ್, ಮಂಡ್ಯದಲ್ಲಿ ಬಿಜೆಪಿಯ ಅನಗತ್ಯ ಅಜೆಂಡಾ ಕೆಲಸ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ..!