ಬೆಂಗಳೂರು : “ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ” ಎಂದು ಚುನಾವಣಾ ಪ್ರಚಾರ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿವಾದತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಕೂಡ ನೀಡಿತ್ತು.
ಮಹಿಳಾ ಆಯೋಗ ಸ್ವಯಂ ದೂರು ಪ್ರಶ್ನಿಸಿ ಹೆಚ್.ಡಿ. ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೆಚ್.ಡಿಕೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲ ಎ.ವಿ.ನಿಶಾಂತ್, “ಆರೋಪಕ್ಕೆ ಸಂಬಂಧಿಸಿದಂತೆ ಆಯೋಗವು ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿ ಖುದ್ದು ಹಾಜರಾಗಲು ಸೂಚಿಸಿದೆ. ಆದರೆ, ಈ ನೋಟಿಸ್ ಪೂರ್ವಗ್ರಹ ಪೀಡಿತ ಭಾವನೆಯಿಂದ ಕೂಡಿದ್ದು, ಸ್ವಾಭಾವಿಕ ನ್ಯಾಯತತ್ವಗಳಿಗೆ ವಿರುದ್ಧವಾಗಿದ್ದು, ಇದನ್ನು ರದ್ದುಗೊಳಿಸಬೇಕು” ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ನೋಟಿಸ್ಗೆ ತಡೆ ನೀಡಿ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿತು.”ಮಹಿಳಾ ಆಯೋಗದ ಅಧ್ಯಕ್ಷರು ಜಾರಿ ಮಾಡಿರುವ ನೋಟಿಸ್ ಗೆ ಅರ್ಜಿ ಇತ್ಯರ್ಥವಾಗುವರೆಗೂ ತಡೆ ವಿಧಿಸಲಾಗಿದೆ” ಎಂದು ಆದೇಶಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ : ತುಮಕೂರು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ವಿ.ಸೋಮಣ್ಣ ಪರ ಹೆಚ್.ಡಿ. ಕುಮಾರ ಸ್ವಾಮಿ ಅವರು ಎಪ್ರಿಲ್ 13ರಂದು ತುರುವೇಕೆರೆಯಲ್ಲಿ ಬಹಿರಂಗ ಪ್ರಚಾರ ಸಭೆ ನಡೆಸಿದ್ದರು. ಈ ವೇಳೆ ಭಾಷಣ ಮಾಡಿದ್ದ ಅವರು, “ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ಸ್ವಲ್ಪ ದಾರಿ ತಪ್ಪಿದ್ದು, ಹಳ್ಳಿಯ ಹೆಣ್ಣು ಮಕ್ಕಳ ಬದುಕು ಏನಾಗಬೇಕು ಎಂಬುದರ ಬಗ್ಗೆ ಯೋಚನೆ ಮಾಡಬೇಕಾಗಿದೆ” ಎಂದು ವಿವಾದತ್ಮಕ ಹೇಳಿಕೆ ನೀಡಿದ್ದರು.
ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗ ಗಂಭೀರವಾಗಿ ಇದನ್ನು ಪರಿಗಣಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿತ್ತು. ಅಲ್ಲದೇ ಈ ಬಗ್ಗೆ ಒಂದು ವಾರದೊಳಗೆ ಸ್ಪಷ್ಟನೆ ನೀಡುವಂತೆ ಮಾಜಿ ಸಿಎಂ ಹೆಚ್ ಡಿಕೆಗೆ ನೋಟಿಸ್ ನೀಡಿತ್ತು. ಈ ನೋಟಿಸ್ ವಿರುದ್ಧ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ರಾಜ್ಯ ಮಹಿಳಾ ಆಯೋಗದ ನೋಟಿಸ್ಗೆ ತಡೆ ನೀಡಿದೆ.
ಇದನ್ನೂ ಓದಿ : ಹದಗೆಟ್ಟ ಕಾನೂನು ಸುವ್ಯವಸ್ಥೆ : ಗೃಹಮಂತ್ರಿ ಪರಮೇಶ್ವರ್ ರಾಜೀನಾಮೆಗೆ ಜೆಡಿಎಸ್-ಬಿಜೆಪಿ ಪಟ್ಟು..!