ಬೆಂಗಳೂರು : ನೇಹಾ ಹತ್ಯೆ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೀತಿದೆ. ಆಕ್ರೋಶ ವ್ಯಕ್ತವಾಗ್ತಿದೆ. ಈ ನಡುವೆ ಈ ಪ್ರಕರಣ ಕೈ- ಕಮಲದ ರಾಜಕೀಯ ಕಿತ್ತಾಟಕ್ಕೆ ದಾಳವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಗ್ರಹಿಸಿದ್ದರು. ಇದೀಗ ಈ ಹೇಳಿಕೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಜೆ.ಪಿ ನಡ್ಡಾ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ನೇಹಾ ಪ್ರಕರಣ ಸಿಬಿಐಗೆ ಹೋಗೋ ಸಂದರ್ಭ ಬಂದಿಲ್ಲ. ಕೊಲೆಯಾದ ಒಂದೇ ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಹಿಡಿದಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ಸಮರ್ಥವಾಗಿ ತನಿಖೆ ಮಾಡುತ್ತಿದ್ದಾರೆ. ಧರ್ಮ, ಜಾತಿ ಕಾರಣಕ್ಕೆ ಯಾರನ್ನೂ ರಕ್ಷಣೆ ಮಾಡಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಕೇಸ್ ಸಿಬಿಐಗೆ ಕೊಟ್ಟಿದ್ದೇವೆ ಆ ಎಲ್ಲಾ ಕೇಸ್ಗಳ ತನಿಖೆ ಏನಾಗಿದೆ ಅಂತಾ ನೋಡಿದ್ದೀರಿ. ಆರೋಪಿ ದೇಶಬಿಟ್ಟು ಎಲ್ಲೂ ಓಡಿ ಹೋಗಿಲ್ಲ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತಿದ್ದೇವೆ. ಕಾನೂನು ರೀತಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ತನಿಖೆಯಲ್ಲಿ ಏನ್ ಹೊರಬರುತ್ತೆ ನೋಡೋಣ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಮಾಜಿ ಸಿಎಂ ಸೇರಿ 22ಕ್ಕೂ ಹೆಚ್ಚು ಪ್ರಯಾಣಿಕರ ಲಗೇಜ್ ಬೆಂಗಳೂರಿನಲ್ಲೇ ಬಿಟ್ಟು ಬೆಳಗಾವಿಗೆ ಬಂದ ಇಂಡಿಗೋ ವಿಮಾನ..!