ಉಡುಪಿ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಮುಖ್ಯಮತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಫೆ. 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮನವಿ ಪತ್ರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಏನಿದು ವಿವಾದ? ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿದೆ. ಈ ಪಾರ್ಕ್ ಅನ್ನು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರ ಇವೆ.
ಪರಶುರಾಮನ ಪುತ್ಥಳಿಯು 53 ಅಡಿ ಎತ್ತರವಿದ್ದು, 15 ಟನ್ ತೂಕವಿದೆ. ಇದನ್ನು ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಕೃಷ್ಣನಾಯ್ಕ ಅವರು ನಿರ್ಮಿಸಿದ್ದಾರೆ. ಈ ಮೂರ್ತಿಗೆ ಕಂಚು ಮತ್ತು ಉಕ್ಕು ಬಳಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಪುತ್ಥಳಿಯನ್ನು ಫೈಬರ್ ನಿಂದ ನಿರ್ಮಿಸಲಾಗಿದ್ದು, ಉಕ್ಕು ಮತ್ತು ಕಂಚಿನ ಪುತ್ಥಳಿಗಿಂತ ಕಡಿಮೆ ಖರ್ಚಿನಲ್ಲಿ ಈ ಪುತ್ಥಳಿ ನಿರ್ಮಿಸಲಾಗಿದೆ. ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು ಸುನಿಲ್ ಕುಮಾರ್ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.
ಬಳಿಕ ಈ ಪುತ್ಥಳಿಯ ಸತ್ಯಾಸತ್ಯತೆಗಳು ಬಹಿರಂಗವಾಗಬೇಕು ಎಂದು ಕಾಂಗ್ರೆಸ್ ಅಕ್ರೋಶ ವ್ಯಕ್ತಪಡಿಸಿತ್ತು. ಇದೆಲ್ಲದರ ನಡುವೆ, ಉದ್ಘಾಟನೆ ನಂತರ 2023ರ ಅಕ್ಟೋಬರ್ ತಿಂಗಳಲ್ಲಿ ಥೀಮ್ ಪಾರ್ಕ್ ನಲ್ಲಿದ್ದ ಪರಶುರಾಮನ ಪುತ್ಥಳಿ ಏಕಾಏಕಿ ನಾಪತ್ತೆಯಾಗಿತ್ತು. ಈ ಹಿನ್ನಲೆ ಫೈಬರ್ ಪುತ್ಥಳಿ ನಿರ್ಮಿಸಿ ಶಾಸಕ ಸುನೀಲ್ ಕುಮಾರ್ ಹಣ ಬಾಚಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಪೊಲೀಸರಿಗೆ ದೂರು ಕೂಡ ಸಲ್ಲಿಕೆಯಾಗಿತ್ತು.
ಇದನ್ನೂ ಓದಿ : ಬೆಳಗಾವಿ : ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ – ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ..!