ಉಡುಪಿ : ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್ ಚುನಾವಣೆ ಕಣ ರಂಗು ಪಡೆದಿದೆ. ಜೂನ್.3 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಪರಿಷತ್ ಎಲೆಕ್ಷನ್ನಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ರಘುಪತಿ ಭಟ್ ಪಕ್ಷೇತರವಾಗಿ ಸ್ಪರ್ಧಿಸುವಂತೆ ಘೋಷಣೆ ಮಾಡಿದ್ದಾರೆ. ಡಾ.ಧನಂಜಯ ಸರ್ಜಿಗೆ ಟಿಕೆಟ್ ನೀಡಿದ್ದಕ್ಕೆ ಉಡುಪಿ ಕ್ಷೇತ್ರದ ಮಾಜಿ ಶಾಸಕ ಕೆ. ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಬಿಜೆಪಿ ಕಾರ್ಯಕರ್ತನ ಕಡೆಗಣನೆ ಆಗಿದೆ, ಇತ್ತೀಚೆಗೆ ಪಕ್ಷಕ್ಕೆ ಬಂದವರನ್ನು ಆಯ್ಕೆ ಮಾಡಿದ್ದಾರೆ. ಪಕ್ಷದ ನಿರ್ಧಾರದ ವಿರುದ್ಧ ನನ್ನ ಹೋರಾಟ. ನಾನು ಗೆದ್ದರೂ ಬಿಜೆಪಿ, ಸೋತರೂ ಬಿಜೆಪಿ. ಅಸೆಂಬ್ಲಿ ಎಲೆಕ್ಷನ್ನಲ್ಲಿ ರಘುಪತಿ ಭಟ್ಗೆ ಟಿಕೆಟ್ ನೀಡಿರಲಿಲ್ಲ, ನಾಯಕರು ವಿಧಾನ ಪರಿಷತ್ನಲ್ಲಿ ಅವಕಾಶ ನೀಡುವ ಭರವಸೆ ನೀಡಿದ್ದರು. ಕೊನೆ ಕ್ಷಣದಲ್ಲಿ ಶಿವಮೊಗ್ಗದ ಧನಂಜಯ್ ಸರ್ಜಿ ಹೆಸರು ಘೋಷಣೆ ಮಾಡಿದ್ದಾರೆ ಎಂದು ಕೆ. ರಘುಪತಿ ಭಟ್ ಹೇಳಿದ್ದಾರೆ.
ಪಕ್ಷದ ನಿರ್ಧಾರದಿಂದ ಭಟ್ ತೀವ್ರ ಅಸಮಾಧಾನಗೊಂಡಿದ್ದು, ರಘುಪತಿ ಭಟ್ ಮನವೊಲಿಸಲು ಪಕ್ಷದ ನಾಯಕರ ಸರ್ಕಸ್ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ಕುಮಾರ್ ಭಟ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ದುಡುಕಿನ ತೀರ್ಮಾನ ಮಾಡದಂತೆ ಮನವೊಲಿಸಲು ಪ್ರಯತ್ನಿಸಿದ್ದಾರೆ.
ಇದನ್ನೂ ಓದಿ : ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ರಿಲೀಸ್..!