2024ರ ಟಿ20 ವಿಶ್ವಕಪ್ನ ಫೈನಲ್ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದು ಬೀಗಿದ್ದು, ಚಾಂಪಿಯನ್ ಆಗಿ ಹೊರಹೊಮ್ಮಿದೆ. ಲಾಸ್ಟ್ ಬಾಲ್ವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 7 ರನ್ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 17 ವರ್ಷಗಳ ಬಳಿಕ ಎರಡನೇ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡು, ಸತತ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಂಡಿದೆ. ಇದರಲ್ಲಿ ನಮ್ಮ ಮಣ್ಣಿನ ಮಗ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಎಸ್.ರಘು ಕೂಡ ಭಾರತದ ವಿಶ್ವಕಪ್ ವಿಕ್ರಮದ ರೂವಾರಿಗಳಲ್ಲಿ ಒಬ್ಬರು ಎನ್ನುವುದು ಹೆಮ್ಮೆಯ ವಿಚಾರ.
ಹೌದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಎಸ್.ರಘು ತಮ್ಮ ಹಿರಿಯ ಪ್ರಾಥಮಿಕ ಶಾರದಾ ನಿಲಯ ಶಾಲೆ ವಿವೇಕನಗರ ಮತ್ತು ಕುಮಟಾದ ಗಿಬ್ ಪ್ರೌಢ ಶಾಲೆಯಲ್ಲಿ ಅಧ್ಯಯನ ಮಾಡಿದರು. ರಘು ಅವರಿಗೆ ಲಕ್ಷಾಂತರ ಭಾರತೀಯ ಯುವಕರಂತೆ ಉನ್ನತ ಮಟ್ಟದಲ್ಲಿ ಕ್ರಿಕೆಟ್ ಆಡುವ ಕನಸು ಕಂಡಿದ್ದರು. ಆದರೆ, ರಘು ಕ್ರಿಕೆಟ್ ಆಡುವುದು ಪೋಷಕರಿಗೆ ಇಷ್ಟವಿರಲಿಲ್ಲ.ಮೋಹನ್ (ಕುಮಟಾದ ದಿವಗಿ ಗ್ರಾಮ) ಮತ್ತು ಚಂದ್ರಕಲಾ ಅವರು ತಮ್ಮ ಮಗ ಉತ್ತಮ ಶಿಕ್ಷಣ ಪಡೆದು, ಒಳ್ಳೆಯ ಉದ್ಯೋಗ ಪಡೆಯಬೇಕೆಂದು ಆಸೆ ಪಟ್ಟಿದ್ದರು.
ಆದರೆ ರಘು ಅವರ ಕ್ರಿಕೆಟ್ ಹುಚ್ಚನ್ನು ನೋಡಿದ ತಂದೆ ಒಂದು ದಿನ ಮಗನಲ್ಲಿ ಕೇಳುತ್ತಾರೆ. ನಿನಗೆ ಓದು, ಜೀವನ ಮುಖ್ಯವೋ, ಕ್ರಿಕೆಟ್ ಮುಖ್ಯವೋ’’ ಎಂದು. ಅಷ್ಟೇ ಕೈಯಲ್ಲೊಂದು ಬ್ಯಾಗ್, ಪಾಕೆಟ್’ನಲ್ಲಿ 21 ರೂಪಾಯಿ ಹಿಡಿದು ರಾಘವೇಂದ್ರ ಮನೆ ಬಿಟ್ಟು ಹೊರಬರುತ್ತಾರೆ.
ಕುಮಟಾದಿಂದ ಹೊರಟು ಬಂದವರು ನೇರ ಬಂದು ಸೇರಿದ್ದು ಹುಬ್ಬಳ್ಳಿಗೆ. ಹುಬ್ಬಳ್ಳಿಯಲ್ಲಿ ವಾಸಿಸಲು ಸ್ಥಳ ಕೂಡ ಇರಲಿಲ್ಲ. ಸುಮಾರು ಒಂದು ವಾರ ರಘು ಹುಬ್ಬಳ್ಳಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ಮಲಗಿದರು. ಆದರೆ ಪೊಲೀಸರು ಅಲ್ಲಿಂದ ಓಡಿಸಿದರು. ತದನಂತರ ಅಲ್ಲಿಂದಲೂ ಹೊರ ನಡೆಯಬೇಕಾದ ಪರಿಸ್ಥಿತಿ ಎದುರಾದಾಗ ಬೇರೆ ದಾರಿ ಕಾಣದ ರಾಘವೇಂದ್ರ ಹತ್ತಿರದ ಸ್ಮಶಾನವೊಂದನ್ನು ಸೇರಿಕೊಳ್ಳುತ್ತಾರೆ.
ಸುಮಾರು 3-4 ವರ್ಷಗಳ ಕಾಲ ಸ್ಮಶಾನವೇ ರಘು ಅವರಿಗೆ ಮನೆಯಾಯಿತು. ಕ್ರಿಕೆಟ್ ಮ್ಯಾಟೇ ಹಾಸಿಗೆ, ಅದೇ ಹೊದಿಕೆ. ಈ ಮಧ್ಯೆ ಬಲಗೈ ಮುರಿದು ಹೋಗಿದ್ದ ಕಾರಣ ಕ್ರಿಕೆಟ್ ಆಡುವ ಕನಸಿಗೆ ಕಲ್ಲು ಬಿದ್ದಿರುತ್ತದೆ. ಮನೆ ಬಿಟ್ಟು ಬಂದಾಗಿದೆ, ವಾಪಸ್ ಹೋಗುವ ಮಾತೇ ಇಲ್ಲ ಎಂದುಕೊಂಡವರು ಕ್ರಿಕೆಟ್ ಕೋಚಿಂಗ್ ಕಡೆ ಗಮನ ಕೊಡುತ್ತಾರೆ.
ರಾಘವೇಂದ್ರ ಅವರು ಆರಂಭದಲ್ಲಿ ಹುಬ್ಬಳ್ಳಿಯಲ್ಲಿ ಕ್ರಿಕೆಟಿಗರಿಗೆ ಕೈಯಿಂದ ಚೆಂಡೆಸೆಯುತ್ತಾ, ಅವರ ಅಭ್ಯಾಸಕ್ಕೆ ನೆರವಾಗುತ್ತಾ ಇದ್ದವನಿಗೆ ಗೆಳೆಯನೊಬ್ಬ ಬೆಂಗಳೂರು ದಾರಿ ತೋರಿಸುತ್ತಾನೆ. ಬೆಂಗಳೂರಿಗೆ ಬಂದ ರಾಘವೇಂದ್ರನಿಗೆ ಆಶ್ರಯ ಕೊಟ್ಟದ್ದು Karnataka Institute of Cricket. ಅಲ್ಲಿಗೆ ಅಭ್ಯಾಸಕ್ಕೆಂದು ಬರುತ್ತಿದ್ದ ಕರ್ನಾಟಕದ ಕ್ರಿಕೆಟಿಗರಿಗೆ ಚೆಂಡೆಸೆಯುವುದು, ಬೌಲಿಂಗ್ ಮಷಿನ್’ನಲ್ಲಿ ಅಭ್ಯಾಸ ಮಾಡಿಸುವುದು ರಾಘವೇಂದ್ರರ ಕೆಲಸವಾಗಿತ್ತು. ಹೀಗಿರುವಾಗ ಒಂದು ದಿನ ಕರ್ನಾಟಕ ಮಾಜಿ ವಿಕೆಟ್ ಕೀಪರ್, ಹಾಲಿ ಅಂಡರ್-19 ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ತಿಲಕ್ ನಾಯ್ಡು ಅವರ ಕಣ್ಣಿಗೆ ಬೀಳುತ್ತಾರೆ. ರಾಘವೇಂದ್ರನ ಕೆಲಸವನ್ನು ನೋಡಿದ ತಿಲಕ್ ನಾಯ್ಡು, ರಾಜ್ಯದ ಮತ್ತೊಬ್ಬ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರಿಗೆ ಪರಿಚಯಿಸುತ್ತಾರೆ.
ಅದು ರಾಘವೇಂದ್ರನ ಬದುಕಿಗೆ ಸಿಕ್ಕ ದೊಡ್ಡ ತಿರುವು. ಹುಡುಗನ ಪ್ರಾಮಾಣಿಕತೆಯನ್ನು ಗಮನಿಸಿದ ಶ್ರೀನಾಥ್, ‘ಕರ್ನಾಟಕ ರಣಜಿ ತಂಡದ ಜೊತೆ ಇದ್ದು ಬಿಡು’ ಎಂದು ಅಲ್ಲಿಗೆ ಕರೆ ತಂದು ಸೇರಿಸುತ್ತಾರೆ. ಕ್ರಿಕೆಟ್ ಸೀಸನ್’ನಲ್ಲಿ ಕರ್ನಾಟಕ ತಂಡದ ಜೊತೆ ಕೆಲಸ. ಇಲ್ಲಿ ಕೆಲಸವಿಲ್ಲದಿದ್ದಾಗ ಚಿನ್ನಸ್ವಾಮಿ ಕ್ರೀಡಾಂಗಣದ ಪಕ್ಕದಲ್ಲೇ ಇರುವ National Cricket Academyಯಲ್ಲಿ ಕೆಲಸ ಮಾಡುತ್ತಿದ್ದರು. ಈ ರೀತಿ 3-4 ವರ್ಷ ಒಂದು ಪೈಸೆ ದುಡ್ಡು ಪಡೆಯದೆ ಕೆಲಸ ಮಾಡಿದ್ದ ರಾಘವೇಂದ್ರ ಕೈಯಲ್ಲಿ ದುಡ್ಡಿಲ್ಲದ ಕಾರಣ ಎಷ್ಟೋ ದಿನ ಊಟವಿಲ್ಲದೆ ರಾತ್ರಿ ಕಳೆದದ್ದೂ ಇದೆ. ಬಳಿಕ NCAನಲ್ಲಿದ್ದಾಗ ಬಿಸಿಸಿಐ level-1 ಕೋಚಿಂಗ್ ಕೋರ್ಸ್ ಪೂರ್ತಿಗೊಳಿಸುತ್ತಾರೆ. NCAಗೆ ಬರುತ್ತಿದ್ದ ಭಾರತ ತಂಡದ ಕ್ರಿಕೆಟಿಗರಿಗೆ ಅಭ್ಯಾಸ ಮಾಡಿಸುತ್ತಾ ಅವರ ನೆಚ್ಚಿನ ಹುಡುಗನಾಗಿ ಬಿಡುತ್ತಾರೆ.
ರಾಘವೇಂದ್ರನ ಪ್ರತಿಭೆಯನ್ನು ಸಚಿನ್ ತೆಂಡೂಲ್ಕರ್ ಬೇಗನೆ ಗುರುತಿಸುತ್ತಾರೆ. ಪರಿಣಾಮ 2011ರಲ್ಲಿ ಭಾರತ ತಂಡಕ್ಕೆ ಟ್ರೈನಿಂಗ್ ಅಸಿಸ್ಟೆಂಟ್ ಆಗಿ ಸೇರಿಕೊಳ್ಳುತ್ತಾನೆ. ಕಳೆದ 13 ವರ್ಷಗಳಿಂದ ಭಾರತ ತಂಡದ ಜೊತೆ ಇರುವ ಹಣೆಯಲ್ಲಿ ಕುಂಕುಮ, ಸಾಧಾರಣ ವ್ಯಕ್ತಿಯಂತೆ ಕಾಣುವ ರಾಘವೇಂದ್ರ ಅವರ ಸಂಪೂರ್ಣ ಆತ್ಮವಿಶ್ವಾಸವೇ ಈ ಮಟ್ಟಕ್ಕೆ ತಲುಪಲು ಕಾರಣ. ಬಡತನ ಸೇರಿದಂತೆ ಹಲವಾರು ಅಡ್ಡಿ ಆತಂಕಗಳಿದ್ದರೂ ಕಠಿಣ ಪರಿಶ್ರಮದ ಮೂಲಕ ಭಾರತ ಕ್ರಿಕೆಟ್ ತಂಡದಲ್ಲಿ ಥ್ರೋಡೌನ್ ಸ್ಪೆಷಲಿಸ್ಟ್ ಆಗಿದ್ದು, ಅವರಿಗೆ ಕ್ರಿಕೆಟ್ ಬಗ್ಗೆ ಇರುವ ಆಸಕ್ತಿ ಮತ್ತು ದೃಢ ನಿರ್ಧಾರ, ಪರಿಶ್ರಮಕ್ಕೆ ಸಿಕ್ಕ ದೊಡ್ಡ ಪ್ರತಿಫಲವೇ ಟಿ20 ವಿಶ್ವಕಪ್ ಎಂದು ಹೇಳಿದರು ತಪ್ಪಾಗಲಾರದು.
ಇದನ್ನೂ ಓದಿ : ಇಂದು ದರ್ಶನ್ ನೋಡಲು ಪರಪ್ಪನ ಅಗ್ರಹಾರಕ್ಕೆ ಬರ್ತಿದ್ದಾರೆ ಅಮ್ಮ, ಸಹೋದರ..!